

ಮಂಗಳೂರು: ಮಂಗಳೂರಿನ ಮೂಡುಬಿದಿರೆಯಲ್ಲಿ ನಾಲ್ವರು ಖಾಸಗಿ ಕಾಲೇಜು ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಇಬ್ಬರು ಸೇರಿದಂತೆ ಮೂವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೆಪ್ಟೆಂಬರ್ 3ರಂದು ಮೂಡುಬಿದಿರೆ ಬಸ್ ನಿಲ್ದಾಣದ ಸಮೀಪದ ಕೆಫೆಯೊಂದಕ್ಕೆ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಬೆಳಗಿನ ಉಪಾಹಾರಕ್ಕೆ ತೆರಳಿದ್ದರು.
ಈ ವೇಳೆ ಮೂವರು ಆರೋಪಿಗಳು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಅನುಮತಿ ಇಲ್ಲದೆ ಕೆಫೆಗೆ ಪ್ರವೇಶಿಸಿ, ವಿದ್ಯಾರ್ಥಿಗಳ ಗುರುತು ಹಾಗೂ ಅವರು ಅಲ್ಲಿಗೆ ಬಂದಿರುವ ಕಾರಣದ ಬಗ್ಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ನಂತರ ಆರೋಪಿಗಳು ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದು, ಘಟನೆಯಿಂದ ಭಯಗೊಂಡ ವಿದ್ಯಾರ್ಥಿಗಳು ಆರಂಭದಲ್ಲಿ ಪೊಲೀಸರನ್ನು ಸಂಪರ್ಕಿಸದೆ ದೂರು ದಾಖಲಿಸಿರಲಿಲ್ಲ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಪ್ರತಿಭಾ ಅವರು ಕೆಫೆಗೆ ತೆರಳಿ, ಅಲ್ಲಿನ ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ಪೊಲೀಸರೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಿತಿಲ್ ಪೂಜಾರಿ, ಪ್ರೇಮ್ ಭಂಡಾರಿ ಹಾಗೂ ಸಂಜಯ್ ಹೆಗಡೆ ಪ್ರಕರಣದ ಆರೋಪಿಗಳಾಗಿದ್ದಾರೆ. ಈ ಮೂವರ ವಿರುದ್ಧ ಇದೀಗ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ಗಳಾದ 126(2), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸೆಕ್ಷನ್ಗಳು ಅಕ್ರಮವಾಗಿ ತಡೆದು ನಿಲ್ಲಿಸುವುದು, ಉದ್ದೇಶಪೂರ್ವಕ ಅವಮಾನ, ಕ್ರಿಮಿನಲ್ ಬೆದರಿಕೆ ಹಾಗೂ ಸಾಮಾನ್ಯ ಉದ್ದೇಶದಿಂದ ಹಲವರು ಸೇರಿ ನಡೆಸುವ ಕೃತ್ಯಗಳಿಗೆ ಸಂಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರೇಮ್ ಭಂಡಾರಿ ಹಾಗೂ ಸಂಜಯ್ ಹೆಗಡೆ ವಿರುದ್ಧ ಈ ಹಿಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇವರ ವಿರುದ್ಧ ರೌಡಿ ಶೀಟ್ ಕೂಡ ತೆರೆಯಲಾಗಿದೆ ಎಂದು ತಿಳಿದುಬಂದಿದೆ.