

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ಸುರಂಗ ರಸ್ತೆಗೆ ಇಷ್ಟು ಹಣ ಬೇಕೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು ಎಂಬುದರ ಕುರಿತು ಸರ್ಕಾರ ಸಮಗ್ರ ಅಧ್ಯಯನ ನಡೆಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿರಲಿದೆ. ಈ ಅವಧಿಯಲ್ಲಿ ಸರ್ಕಾರ ಬೆಂಗಳೂರನ್ನು ಹಾಳು ಮಾಡಬಾರದು.
ಮೂಲಸೌಕರ್ಯ ಕಾಮಗಾರಿಗಳಿಗೆ ಉದ್ಯಾನವನದ ಜಮೀನು ಬಳಸುವ ಮಸೂದೆಯನ್ನು ರಾಜ್ಯ ಸರ್ಕಾರ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂಪಡೆದುಕೊಂಡಿದೆ ಎಂದು ತಿಳಿಸಿದರು.