

ದಾವಣಗೆರೆ: ದಾವಣಗೆರೆಯ ಬಿ.ಡಿ. ಲೇಔಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ನಡುರಸ್ತೆಯಲ್ಲೇ ಯುವಕರು ತಲ್ವಾರ್ ಹಾಗೂ ದೊಣ್ಣೆ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ದಾವಣಗೆರೆ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್, ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ.
ಈ ವೇಳೆ ಎರಡೂ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಮೈನು, ಜುನೇದ್ ಮತ್ತು ಇರ್ಫಾನ್ ಸೇರಿದಂತೆ ಹಲವರಿಗೆ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಕೆಲವರು ರಕ್ತದ ಮಡುವಿನಲ್ಲಿ ರಸ್ತೆಯಲ್ಲೇ ಬಿದ್ದಿದ್ದರು ಎಂದು ತಿಳಿದುಬಂದಿದೆ.
ಸ್ಥಳೀಯರು ತಕ್ಷಣ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ನಡುರಸ್ತೆಯಲ್ಲೇ ನಡೆದ ಈ ತಲ್ವಾರ್ ಕಾಳಗದಿಂದ ಸ್ಥಳೀಯರು ಹಾಗೂ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.