

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು 'ಹಣ ನೀಡಿ ನಡೆಸುತ್ತಿರುವ ಪಾದಯಾತ್ರೆ' (paid padyatra) ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೋಮವಾರ ತೀವ್ರವಾಗಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ನಾಯಕರನ್ನಾಗಿ ಮಾಡಲು ಈ ಪಾದಯಾತ್ರೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಸ್ಥಳೀಯ ಬಿಜೆಪಿ ನಾಯಕರು ವಿಜಯೇಂದ್ರ ಅವರ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಅವರು ಪ್ರತಿಪಾದಿಸಿದರು.
"ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ಬಿಜೆಪಿ ನಾಯಕರೇ ಇಲ್ಲದಂತಾಗಿದೆ. ಇದು ಜನಪ್ರಿಯ ಪಾದಯಾತ್ರೆಯಾಗಿದ್ದರೆ ಜನರು ಸ್ವಯಂಪ್ರೇರಿತರಾಗಿ ಸೇರುತ್ತಿದ್ದರು. ಅದಕ್ಕಾಗಿಯೇ ನಾನು ಇದನ್ನು 'ಹಣ ನೀಡಿ ನಡೆಸುತ್ತಿರುವ ಪಾದಯಾತ್ರೆ' ಎಂದು ಕರೆಯುತ್ತಿದ್ದೇನೆ ಎಂದರು.
ಅವರು ತಮ್ಮ ನಾಯಕತ್ವವನ್ನು ತೋರಿಸುಲು ಪ್ರಯತ್ನಿಸುತ್ತಿದ್ದಾರೆ. ಹಿರಿಯ ಯಡಿಯೂರಪ್ಪನವರು ಕಿರಿಯ ಯಡಿಯೂರಪ್ಪನವರನ್ನು ನಾಯಕರನ್ನಾಗಿ ಮಾಡಲು ಬಯಸುತ್ತಿದ್ದಾರೆ, ಆದರೆ ಬಿಜೆಪಿ ನಾಯಕರು ಅವರನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹೀಗಾಗಿ ಅವರು ಹಣ ನೀಡಿ ಪಾದಯಾತ್ರೆ, ಕಾಸಿಗಾಗಿ ಸುದ್ದಿಯೊಂದಿಗೆ ಪ್ರಯತ್ನಿಸುತ್ತಿದ್ದಾರೆ ಎಂದರು.
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸೆಪ್ಟೆಂಬರ್ 1 ರಂದು ಆರಂಭವಾದ ಈ ಪಾದಯಾತ್ರೆಗೆ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದರು. ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಮುಕ್ತಾಯಗೊಳ್ಳಲಿದೆ.
ಮತ್ತೊಂದೆಡೆ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ. ರವಿ, ಪಕ್ಷದ ಪಾದಯಾತ್ರೆಗೆ ಎಲ್ಲೆಡೆ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅನುದಾನದ ದುರುಪಯೋಗದ ಬಗ್ಗೆ ಪಕ್ಷವು ಕಳವಳ ವ್ಯಕ್ತಪಡಿಸಿದೆ. ಭ್ರಷ್ಟಾಚಾರದ ವಿಷಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಕೂಡ ಈ ಯಾತ್ರೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
"ಎಲ್ಲೆಡೆ ಸಾರ್ವಜನಿಕರು ಬಿಜೆಪಿಯ ಪಾದಯಾತ್ರೆಗೆ ಬೆಂಬಲ ನೀಡುತ್ತಿದ್ದಾರೆ. ಈ ಪಾದಯಾತ್ರೆಯು ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತಿದೆ. ಹಲವು ವಿಷಯಗಳನ್ನು ಪ್ರಸ್ತಾಪಿಸುತ್ತಾ ಈ ಯಾತ್ರೆಯನ್ನು ಕೈಗೊಂಡಿದ್ದೇವೆ; ಉದಾಹರಣೆಗೆ, SC/ST ಅನುದಾನದ ದುರುಪಯೋಗದ ವಿಷಯವನ್ನು ನಾವು ಎತ್ತಿದ್ದೇವೆ. ಜೊತೆಗೆ, ಭ್ರಷ್ಟಾಚಾರದ ಸಮಸ್ಯೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಾವು ಶ್ರಮಿಸುತ್ತಿದ್ದೇವೆ ಎಂದು ಸಿ.ಟಿ. ರವಿ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ನಾಯಕ ಬಿ. ಶ್ರೀರಾಮುಲು ಮಾತನಾಡಿ, ಪಾದಯಾತ್ರೆಯ ಮೂಲಕ ಪಕ್ಷವು ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುತ್ತಿರುವುದರಿಂದ ಪ್ರತಿಯೊಬ್ಬರೂ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಹೇಳಿದರು. "ಎಷ್ಟು ಜನರು ಸೇರುತ್ತಿದ್ದಾರೆ ಎಂಬುದನ್ನು ನೋಡಿ. ಪ್ರತಿಯೊಬ್ಬರೂ ಬಿಜೆಪಿಯನ್ನು ಬೆಂಬಲಿಸಬೇಕು. ಈ ಪಾದಯಾತ್ರೆಯ ಮೂಲಕ ನಾವು ಹಲವು ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದೇವೆ ಮತ್ತು ಜನರು ನಮಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.