

ಬೆಂಗಳೂರು: ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ಗಣೇಶ ಮೂರ್ತಿಯನ್ನೇ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ಕದ್ದು, ಕೆಲವೇ ನಿಮಿಷಗಳಲ್ಲಿ ಮಿಂಚಿನಂತೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು.. ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾಗಡಿ ರಸ್ತೆಯ ದಾಸರಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ಇಡಲಾಗಿದ್ದ ಗಣೇಶ ಮೂರ್ತಿಯನ್ನು ನಾಲ್ವರು ದುಷ್ಕರ್ಮಿಗಳು ಮುಂಜಾನೆ ಕದ್ದೊಯ್ದಿದ್ದಾರೆ.
ಮುಂಜಾನೆ ವೇಳೆ ಸ್ಥಳಕ್ಕೆ ಬಂದ ನಾಲ್ವರು ದುಷ್ಕರ್ಮಿಗಳು ರಸ್ತೆ ಬದಿಯಲ್ಲಿದ್ದ ಗಣೇಶ ಮೂರ್ತಿಯನ್ನು ಮಿನಿ ಗೂಡ್ಸ್ ವಾಹನಕ್ಕೆ ತುಂಬಿಕೊಂಡಿದ್ದಾರೆ. ಬಳಿಕ ಯಾರಿಗೂ ಅನುಮಾನ ಬಾರದಂತೆ ಕ್ಷಣಾರ್ಧದಲ್ಲೇ ಅಲ್ಲಿಂದ ಪರಾರಿಯಾಗಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಎಸ್ಕೇಪ್
ಕಳ್ಳರ ಖತರ್ನಾಕ್ ಕೆಲಸ ಕೆಲವೇ ನಿಮಿಷಗಳಲ್ಲಿ ಮುಗಿದಿದ್ದು, ಇದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಣೇಶ ಮೂರ್ತಿ ಕಳ್ಳತನದ ಹಿಂದೆ ಯಾರಿದ್ದಾರೆ ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಕಳ್ಳತನ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ CCTV ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಮೂರ್ತಿಯನ್ನು ಕೊಂಡೊಯ್ದ ಮಿನಿ ಗೂಡ್ಸ್ ವಾಹನದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಗಣೇಶೋತ್ಸವದ ಸಂದರ್ಭದಲ್ಲಿ ಭಕ್ತರು ಪೂಜೆಗಾಗಿ ಪ್ರತಿಷ್ಠಾಪಿಸಿದ್ದ ಮೂರ್ತಿಯನ್ನೇ ಕಳ್ಳರು ಕದ್ದೊಯ್ದಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಗಣೇಶ ಮೂರ್ತಿಯನ್ನು ಪತ್ತೆಹಚ್ಚುವಂತೆ ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದ್ದಾರೆ.
ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಖದೀಮರು ನಸುಕಿನ ಜಾವ ಟಾಟಾ ಏಸ್ ಗೂಡ್ಸ್ ನಲ್ಲಿ ಗಣೇಶ ಮೂರ್ತಿಗಳನ್ನ ಕದ್ದೊಯ್ದ ದೃಶ್ಯ ಪಕ್ಕದ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.