ಜಮೀನು ವಿವಾದಕ್ಕೆ ಸ್ಪಂದಿಸದ ಖಾಕಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ತಿಪಟೂರು ಠಾಣೆ ಮುಂಭಾಗದಲ್ಲೇ ವಿಷ ಸೇವಿಸಿ ತಂದೆ-ಮಗ ಆತ್ಮಹತ್ಯೆಗೆ ಯತ್ನ..!

ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದರೂ ಅಲ್ಲಿಯೂ ದೂರು ದಾಖಲಿಸಿಕೊಳ್ಳಲಿಲ್ಲ ಎಂದು ತಂದೆ-ಮಗ ಆರೋಪಿಸಿದ್ದಾರೆ. ಭೂ ವಿವಾದಕ್ಕಿಂತಲೂ ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿರುವುದೇ ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ತಿಳಿಸಿದ್ದಾರೆ.
File photo
ಸಂಗ್ರಹ ಚಿತ್ರ
Updated on

ತಿಪಟೂರು: ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ, ಮನನೊಂದ ತಂದೆ ಮತ್ತು ಮಗ ಪೊಲೀಸ್ ಠಾಣೆಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ಸಂಜೆ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ.

ನೊಣವಿನಕೆರೆ ಗ್ರಾಮದ ನಿವಾಸಿಗಳಾದ ಹುಚ್ಚಪ್ಪ ಮತ್ತು ಅವರ ಪುತ್ರ ನಾಗರಾಜು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ಎದುರು ವಿಷ ಸೇವಿಸಿದ್ದಾರೆ. ಹಲವು ದಿನಗಳಿಂದ ಠಾಣೆಗೆ ಅಲೆದಾಡಿಸಿದರೂ ತಮ್ಮ ಸಮಸ್ಯೆಗೆ ಪೊಲೀಸರು ಸ್ಪಂದಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ವಿಷ ಸೇವಿಸಿದ ಬಳಿಕ ಇಬ್ಬರೂ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೃಷಿ ಭೂಮಿಗೆ ಸಂಬಂಧಿಸಿದ ದಾರಿ ಹಕ್ಕಿನ ವಿವಾದವೇ ಪ್ರಕರಣದ ಮೂಲವಾಗಿದೆ. ಈ ವಿಚಾರವಾಗಿ ಗ್ರಾಮದಲ್ಲಿ ಈಗಾಗಲೇ ಘರ್ಷಣೆಯೂ ನಡೆದಿತ್ತು. ಸಮಸ್ಯೆ ಪರಿಹರಿಸಿಕೊಳ್ಳಲು ಹುಚ್ಚಪ್ಪ ಮತ್ತು ನಾಗರಾಜು ಮೊದಲು ನೊಣವಿನಕೆರೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಆದರೆ, ಪೊಲೀಸರು ದೂರು ಸ್ವೀಕರಿಸದೆ ವಾಪಸ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದರೂ ಅಲ್ಲಿಯೂ ದೂರು ದಾಖಲಿಸಿಕೊಳ್ಳಲಿಲ್ಲ ಎಂದು ತಂದೆ-ಮಗ ಆರೋಪಿಸಿದ್ದಾರೆ. ಭೂ ವಿವಾದಕ್ಕಿಂತಲೂ ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿರುವುದೇ ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ತಿಳಿಸಿದ್ದಾರೆ.

ಎರಡು ಠಾಣೆಗಳ ನಡುವೆ ಹಲವು ಬಾರಿ ಅಲೆದಾಡಿಸಿದರೂ ಯಾವುದೇ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಬೇಸತ್ತು ಈ ಕೃತ್ಯಕ್ಕೆ ಮುಂದಾಗಿದ್ದೇವೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾನ್ಯ ಜನರು, ವಿಶೇಷವಾಗಿ ಆಸ್ತಿ ಮತ್ತು ಭೂ ವಿವಾದಗಳಿಗೆ ಸಂಬಂಧಿಸಿದ ದೂರುಗಳನ್ನು ಪೊಲೀಸರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

File photo
ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲ: ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು? ತಕ್ಷಣವೇ ರಾಜೀನಾಮೆ ಪಡೆಯಿರಿ..!

ಪ್ರಭಾವಿ ವ್ಯಕ್ತಿಗಳ ಒತ್ತಡವಿದ್ದಾಗ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸುತ್ತಾರೆ ಎಂಬ ಆರೋಪವನ್ನೂ ಸ್ಥಳೀಯರು ಮಾಡಿದ್ದಾರೆ. ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ಸದ್ಯ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದೇ ರೀತಿಯ ಘಟನೆಗಳು ಪದೇಪದೇ ನಡೆಯುತ್ತಿರುವುದು ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇತ್ತೀಚೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಚಲನಚಿತ್ರ ನಿರ್ಮಾಪಕ ಆಂಥನಿ ಹೆನ್ರಿ ಅವರ ಮೇಲೆ ಜಮೀನುದಾರನೊಂದಿಗೆ ಸಂಬಂಧ ಹೊಂದಿರುವ ಕೆಲವರು ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿತ್ತು.

ಅಕ್ರಮವಾಗಿ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಡಿತಗೊಳಿಸಿದರೂ ಪೊಲೀಸರು ಅಸಹಾಯಕರಾಗಿ ನೋಡುತ್ತಿದ್ದರು ಎಂಬ ಆರೋಪ ಆ ಪ್ರಕರಣದಲ್ಲಿತ್ತು.

ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗುತ್ತಾರೆ ಹಾಗೂ ಅನುಕೂಲಕರವಲ್ಲದ ಪ್ರಕರಣಗಳಲ್ಲಿ ದೂರು ದಾಖಲಿಸಲು ಹಿಂದೇಟು ಹಾಕುತ್ತಾರೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಜನರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವ ಅವಕಾಶವಿದೆ ಎಂದು ಹೇಳಿದ್ದಾರೆ.

ಕಾನೂನನ್ನು ಕೈಗೆ ತೆಗೆದುಕೊಳ್ಳುವ ಬದಲು ಕಾನೂನುಬದ್ಧ ಮಾರ್ಗ ಅನುಸರಿಸಬೇಕು. ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯವೂ ಅವರನ್ನು ಪ್ರಶ್ನಿಸಬಹುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com