

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ವಾರದಲ್ಲಿ ಎರಡು ದಿನ ಕನಿಷ್ಠ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಸಿಇಒಗಳಿಗೆ ಪತ್ರ ಬರೆದಿರುವ ಅವರು, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಹಾಜರಾತಿ ಮತ್ತು ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.
ಅಲ್ಲದೆ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.
ಸಿಇಒಗಳ ನಿಯಮಿತ ಗ್ರಾಮ ಭೇಟಿಯಿಂದ ಜಲ ಜೀವನ್ ಮಿಷನ್, ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ), ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ), ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಾಗೂ ಮುಖ್ಯಮಂತ್ರಿ ರಸ್ತೆ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳು ಹಾಗೂ ಸರ್ಕಾರಿ ಜಮೀನುಗಳ ಮೇಲಿನ ಒತ್ತುವರಿಗಳನ್ನು ತೆರವುಗೊಳಿಸುವುದು, ಒಣ ಹಾಗೂ ಹಸಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ಸಿಇಒಗಳಿಗೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 6.13 ಕೋಟಿ ಜನಸಂಖ್ಯೆಯ ಪೈಕಿ 4.45 ಕೋಟಿ ಜನರು 26,589ಕ್ಕೂ ಹೆಚ್ಚು ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಅಂದರೆ ರಾಜ್ಯದ ಸುಮಾರು ಮುಕ್ಕಾಲು ಭಾಗದಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಹೀಗಾಗಿ ಸಿಇಒಗಳು ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹರಿಸುವುದು ಅತ್ಯಂತ ಮುಖ್ಯ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರು, ಉತ್ತಮ ರಸ್ತೆ, ಉದ್ಯೋಗ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಿದರೆ ಜನರು ನಗರ ಮತ್ತು ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಯಬಹುದು ಎಂದು ಅವರು ಹೇಳಿದ್ದಾರೆ.
ಇದರಿಂದ ನಗರ ಪ್ರದೇಶಗಳ ಮೇಲಿನ ಒತ್ತಡ ಕಡಿಮೆಯಾಗುವುದರ ಜೊತೆಗೆ ಗ್ರಾಮೀಣಾಭಿವೃದ್ಧಿಗೂ ವೇಗ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.