

ದಾವಣಗೆರೆ: ದಾವಣಗೆರೆಯಲ್ಲಿ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ಚಿರತೆ ರಕ್ಷಣಾ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದೆ.
ಅಧಿಕಾರಿಗಳು ಚಿರತೆಗೆ ಅರವಳಿಕೆ ಮದ್ದು ನೀಡಿದರೂ, ಅದು ಸಂಪೂರ್ಣವಾಗಿ ಪ್ರಜ್ಞಾಹೀನವಾಗುವ ಮುನ್ನ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಅವರು ಗಾಯಗೊಂಡಿದ್ದಾರೆ. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಳುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆರಹಗಿದೆ. ಈ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮಂಗಳವಾರ ಬೆಳಗ್ಗೆ ನಡೆದಿದೆ.
ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಚಿರತೆಗೆ ರಭಸವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಚರಂಡಿಗೆ ಬಿದ್ದ ಚಿರತೆಗೆ ಗಂಭೀರ ಗಾಯಗಳಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕಾಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಾತ್ರಿಯಿಡೀ ಗಾಯದಿಂದ ನರಳಾಡುತ್ತಿದ್ದ ಚಿರತೆಗೆ ಚಿಕಿತ್ಸೆ ಕೊಡುವ ಸಲುವಾಗಿ, ಅದನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು ಎಂದು ಎಸಿಎಫ್ ಆನಂದ್ ತಿಳಿಸಿದ್ದಾರೆ.
ಹಂಪಿಯಿಂದ ಆಗಮಿಸಿದ ವೈದ್ಯರ ತಂಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮೊದಲ ಅರಿವಳಿಕೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಲು ಯತ್ನಿಸಿದಾಗ, ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ಮಾಡಿದೆ. ಇದರಿಂದ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡನೇ ಬಾರಿಗೆ ಅರಿವಳಿಕೆ ನೀಡಿದ ಬಳಿಕ ಚಿರತೆಯನ್ನು ಸೆರೆಹಿಡಿದು, ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಎಸಿಎಫ್ ಮಾಹಿತಿ ನೀಡಿದರು.