ಕೃಷ್ಣಾ ಮೇಲ್ದಂಡೆ ಯೋಜನೆ-3 ಕೋರ್ಟ್ ಕೇಸ್ ನೆಪ ಹೇಳಿ ವಿಳಂಬ ಮಾಡಿದರೆ ಸಹಿಸಲ್ಲ; ರಾಜಕೀಯ ಒತ್ತಡಕ್ಕೆ ಮಣಿಯಬೇಡಿ; ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ..!

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಕಾನೂನು ಪ್ರಕಾರವೇ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕು.
Minister N ChaluvarayaswamyFile
ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ
Updated on

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ-3 (UKP-3) ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ರಾಜಕೀಯ ಒತ್ತಡಗಳಿಗೆ ಮಣಿಯದೆ, ಕಾನೂನಿನ ಚೌಕಟ್ಟಿನಲ್ಲೇ ಕೆಲಸ ಮಾಡುವಂತೆ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (KBJNL) ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಖಡಕ್ ಸೂಚನೆ ನೀಡಿದ್ದಾರೆ.

ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್‌ಎಲ್) ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆ-3 (ಯುಕೆಪಿ-3) ಅಡಿಯಲ್ಲಿ ಹೆಚ್ಚುವರಿಯಾಗಿ 100 ಟಿಎಂಸಿ ಅಡಿ ನೀರು ಸಂಗ್ರಹಿಸಲು ಕಾಲುವೆಗಳು ಹಾಗೂ ಗ್ರಾಮಗಳು ಸೇರಿದಂತೆ ಒಟ್ಟು 1,33,887 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸವಾಲಿನ ಕೆಲಸವಾಗಿದೆ ಎಂದು ಹೇಳಿದರು.

ಅಲ್ಲದೆ, ಒಟ್ಟು 184 ಗ್ರಾಮಗಳ ಪೈಕಿ 87 ಗ್ರಾಮಗಳಿಗೆ ಸಂಬಂಧಿಸಿದ ಅಧಿಸೂಚನೆ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಕಾನೂನು ಪ್ರಕಾರವೇ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಈ ಕುರಿತು ಪ್ರಾದೇಶಿಕ ಆಯುಕ್ತರು ಹಾಗೂ ಪ್ರಧಾನ ವ್ಯವಸ್ಥಾಪಕರೊಂದಿಗೆ ವಿಶೇಷ ಸಭೆ ನಡೆಸುವುದಾಗಿ ಸಚಿವರು ತಿಳಿಸಿದರು.

Minister N ChaluvarayaswamyFile
'ಗುಂಡಿಗೆ' ಇದ್ದರೆ ಚರ್ಚೆಗೆ ವಿಧಾನಸೌಧಕ್ಕೆ ಬನ್ನಿ; ನಾನು ಹೇಳೋಕೆ ಶುರು ಮಾಡಿದ್ರೆ ನಿಮಗೆ ತಡ್ಕೋಳ್ಳೋಕೆ ಆಗೋಲ್ಲ: ಚಲುವರಾಯಸ್ವಾಮಿ; Video

ಕೃಷ್ಣಾ ಮೇಲ್ದಂಡೆ ಯೋಜನೆ-1, 2 ಮತ್ತು 3ಕ್ಕೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಈ ಸಂಬಂಧ ಆರ್ಥಿಕ ನೆರವು ಒದಗಿಸುವ ಭರವಸೆಯನ್ನೂ ನೀಡಿದರು.

ವಿಜಯಪುರ ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನ್ಯಾಯಾಲಯದ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಕಾಮಗಾರಿಗಳನ್ನು ವಿಳಂಬ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಚಲುವರಾಯಸ್ವಾಮಿ ಅವರು, ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಕೆಬಿಜೆಎನ್‌ಎಲ್ ವ್ಯಾಪ್ತಿಯ ವಿವಿಧ ಯೋಜನೆಗಳ ಕುರಿತು ಸಚಿವರು ಸಮಗ್ರ ಮಾಹಿತಿ ಪಡೆದರು.

ಈ ವೇಳೆ, 24,000 ಹೆಕ್ಟೇರ್ ಪ್ರದೇಶಕ್ಕೆ ಒದಗಿಸಲಾಗಿರುವ ಹನಿ ನೀರಾವರಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಗುತ್ತಿಗೆದಾರರು ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ ಹಾಗೂ ಐದು ವರ್ಷಗಳ ನಿರ್ವಹಣೆಯ ನಿಯಮವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಅವರು ಹೇಳಿದರು. ನಿಯಮ ಉಲ್ಲಂಘಿಸುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com