

ಬೆಂಗಳೂರು: ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕ ಇದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಗದು ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.
ಇಡಿ ದಾಳಿ ವೇಳೆ ನಮ್ಮ ಮನೆಯಲ್ಲಿ ಪತ್ತೆಯಾದ 2 ಕೋಟಿ ರೂ. ಹಣ ನಮ್ಮದೇ, ಅದನ್ನು ಕಾನೂನುಬದ್ಧವಾಗಿ ಕ್ಲೈಮ್ ಮಾಡುತ್ತೇವೆ. ಆಫ್ರಿಕಾದಲ್ಲಿ ಮೈನಿಂಗ್ ಮತ್ತು ಟ್ರೇಡಿಂಗ್ ಕಂಪನಿ ಆರಂಭಿಸಲು ಯೋಜನೆ ರೂಪಿಸಿದ್ದೆವು. ಆದರೆ ಇನ್ನೂ ಹೂಡಿಕೆ ಮಾಡಿಲ್ಲ. ಮಾಡುವ ಪ್ರಕ್ರಿಯೆಯಲ್ಲಿದ್ದೇವೆ ಎಂದರು.
ಇದೇ ವಿದೇಶಿ ಹೂಡಿಕೆ ವಿಚಾರ ಮುಂದಿಟ್ಟುಕೊಂಡು ನಮ್ಮ ಮೇಲೆ ಇಡಿ ದಾಳಿ ನಡೆಸಲಾಗಿದೆ. ಮಗ ಮತ್ತು ಮಗಳ ಹೆಸರಿನಲ್ಲಿ ಕಂಪನಿ ಮಾಡಿರುವುದು ನಿಜ. ಈ ಸಂಬಂಧ ಆದಾಯ ತೆರಿಗೆ (IT) ಇಲಾಖೆಗೆ ಈಗಾಗಲೇ ಎಲ್ಲಾ ದಾಖಲೆ ಒದಗಿಸಿದ್ದೇವೆ. ಇಡಿ ಕೇಳಿದಾಗಲೂ ಅಗತ್ಯ ದಾಖಲೆ ನೀಡುತ್ತೇವೆ ಎಂದು ವಿವರಿಸಿದರು.
ನಾನು ಎಲ್ಲಿಯೂ ಜಾತಿ ವಿಚಾರ ತಂದು ಸಮರ್ಥಿಸಿಕೊಳ್ಳುವುದಿಲ್ಲ. ತಪ್ಪು ಮಾಡಿದರೆ ಜಾತಿಯನ್ನು ತರಲು ಸಾಧ್ಯವಿಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ಇದನ್ನು ಸಂಪೂರ್ಣವಾಗಿ ಕಾನೂನಾತ್ಮಕವಾಗಿಯೇ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.