

ಗದಗ: ಬರ ಪರಿಸ್ಥಿತಿ ಸಮೀಕ್ಷೆಯಲ್ಲಿ ಕರ್ನಾಟಕದ ಉತ್ತರ ಭಾಗದ ಜಿಲ್ಲೆಗಳಿಗೆ ಅನ್ಯಾಯವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.
ಗದಗ ನಗರದ ಹತ್ತಿ ಮಾರಾಟ ಸಹಕಾರ ಸಂಘದ ಆವರಣದಲ್ಲಿ ನಗರಸಭೆ ವತಿಯಿಂದ ಗುರುವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳ ಅನೇಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ, ಉತ್ತರ ಕರ್ನಾಟಕದ ಹಲವು ತಾಲೂಕುಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಡುವೆ ತಾರತಮ್ಯ ಮಾಡಲಾಗುತ್ತಿದೆಯೇ ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಭಾಗಕ್ಕೆ ಅನ್ಯಾಯವಾದಾಗ ನಾನು ವಿರೋಧಿಸುತ್ತೇನೆ. ನಾನು ವಿಧಾನಸಭೆ ಸ್ಪೀಕರ್ ಆಗಿದ್ದೇನೆ ಎಂಬ ಕಾರಣಕ್ಕೆ ಎಲ್ಲವನ್ನೂ ಮೌನವಾಗಿ ಒಪ್ಪಿಕೊಳ್ಳಬೇಕಿಲ್ಲ. ತಪ್ಪು ಕಂಡಾಗ ಅದನ್ನು ಮೊದಲು ವಿರೋಧಿಸುವವನು ನಾನೇ. ಆದರೆ ಸ್ಪೀಕರ್ ಆಗಿ ನಾನು ಪಕ್ಷಪಾತವಿಲ್ಲದೆ ಕೆಲಸ ಮಾಡುವ ಜವಾಬ್ದಾರಿಯನ್ನೂ ಹೊಂದಿದ್ದೇನೆ ಎಂದು ತಿಳಿಸಿದರು.
ನಾನು ಇನ್ನೆಷ್ಟು ಕಾಲ ಸ್ಪೀಕರ್ ಸ್ಥಾನದಲ್ಲಿ ಇರುತ್ತೇನೆ ಎಂಬುದು ಗೊತ್ತಿಲ್ಲ. ಆದರೆ, ನಾನು ಸ್ಪೀಕರ್ ಆಗಿರುವವರೆಗೂ ಉತ್ತರ ಕರ್ನಾಟಕದ ಭಾಗಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಯಾರಿಗೂ ಅಥವಾ ಯಾವುದೇ ಒತ್ತಡಕ್ಕೂ ನಾನು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ತಾವು ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದೆ ಎಂದು ಪಾಟೀಲ್ ಇದೇ ವೇಳೆ ಹೇಳಿದರು. “ಆದರೆ ಪಕ್ಷವು ನನಗೆ ವಿಧಾನಸಭೆ ಸ್ಪೀಕರ್ ಸ್ಥಾನ ನೀಡಿತು. ಸಚಿವ ಸ್ಥಾನಕ್ಕಾಗಿ ನಡೆದ ಬೇಡಿಕೆ ಮತ್ತು ಹೋರಾಟದ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಸೇರಿದಂತೆ ಅನೇಕರು ಗೊಂದಲ ಮೂಡಿಸುವಂತಹ ಹೇಳಿಕೆಗಳನ್ನು ನೀಡಿದ್ದರು ಎಂದು ತಿಳಿಸಿದರು.