

ಬೆಂಗಳೂರು: ಸೆಪ್ಟೆಂಬರ್ 14ರ ಸೋಮವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಹೌದು.. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 14ರ ಸೋಮವಾರದಂದು ಹಬ್ಬದ ಆಚರಣೆ ನಡೆಯಲಿದ್ದು, ನಗರದಾದ್ಯಂತ ಈ ನಿಯಮ ಜಾರಿಯಲ್ಲಿರಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆರೆಯಲ್ಲಿ ಪರಿಸರ ಸ್ನೇಹಿ ಗಣೇಶ ವಿಸರ್ಜನೆಗೆ ಜಿಬಿಎ ವ್ಯವಸ್ಥೆ
ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗಾಗಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇಲ್ಲಿ ಕೇವಲ ಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶವಿದ್ದು, ಪಿಒಪಿ (Plaster of Paris) ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಿಸಿಟಿವಿ, ಭಾರಿ ಭದ್ರತೆ
ಸಾರ್ವಜನಿಕರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ, 24 ಗಂಟೆಗಳ ಕ್ರೇನ್ ಸೇವೆ, ಆಂಬುಲೆನ್ಸ್, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಸಂಚಾರ ನಿರ್ವಹಣೆ ವ್ಯವಸ್ಥೆಗಳನ್ನು ಮಾಡಲಾಗಿದೆ.
ಸೆಪ್ಟೆಂಬರ್ 14, 16, 18, 20, 22, 24, 26, 27 ಮತ್ತು 28ರಂದು ವಿಸರ್ಜನೆಗೆ ಅವಕಾಶವಿದ್ದು, ಶುಚಿಗೊಳಿಸುವಿಕೆಗಾಗಿ ಸೆಪ್ಟೆಂಬರ್ 15, 17, 19, 21, 23 ಹಾಗೂ 25ರಂದು ವಿಸರ್ಜನೆಯನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಬಿಬಿಸಿ ಸಿಬಿ ಆಯುಕ್ತ ಜಗದೀಶ್ ಜಿ. ತಿಳಿಸಿದ್ದಾರೆ.