

ರಾಯಚೂರು: ತನ್ನ ತಂಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಅನುಮಾನದ ಹಿನ್ನೆಲೆಯಲ್ಲಿ ಮನೆಯಲ್ಲಿ ಊಟ ಮಾಡುತ್ತಿದ್ದ ಯುವಕನನ್ನು ಮತ್ತೊಬ್ಬ ಯುವಕ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಹನುಮೇಶ್(32) ಎಂದು ಗುರುತಿಸಲಾಗಿದ್ದು, ಅದೇ ಏರಿಯಾದ ಆರೋಪಿ ಶಂಕರ್, ಹತ್ಯೆ ಬಳಿಕ ಖುದ್ದು ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.
ಹನುಮೇಶ್ ಅವಿವಾಹಿತನಾಗಿದ್ದು, ಭತ್ತದ ವ್ಯಾಪಾರ ಮಾಡಿಕೊಂಡು ತಂದೆ-ತಾಯಿ ಹಾಗೂ ತಮ್ಮನ ಜೊತೆ ವಾಸವಾಗಿದ್ದ. ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಟುಂಬಸ್ಥರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಹನುಮೇಶ್ ಮನೆಯಲ್ಲಿ ಒಬ್ಬನೇ ಇದ್ದ. ಆತ ಊಟ ಮುಗಿಸಿ ಭತ್ತದ ವ್ಯಾಪಾರಕ್ಕೆ ತೆರಳಲು ಸಜ್ಜಾಗುತ್ತಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ ಶಂಕರ್, ಏಕಾಏಕಿ ಹಿಂಬದಿಯಿಂದ ಅಟ್ಯಾಕ್ ಮಾಡಿ ಹನುಮೇಶ್ನ ತಲೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.
ಅನೈತಿಕ ಸಂಬಂಧವೇ ಕೊಲೆಗೆ ಕಾರಣ
ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಶಂಕರ್ ಹಾಗೂ ಮೃತ ಹನುಮೇಶ್ ಮನೆಗಳು ಅಕ್ಕಪಕ್ಕದಲ್ಲೇ ಇವೆ. ಆರೋಪಿ ಶಂಕರ್ನ ಸಹೋದರಿಯೊಂದಿಗೆ ಹನುಮೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಶಂಕರ್ನಲ್ಲಿತ್ತು.
ಇದೇ ಕಾರಣಕ್ಕೆ ಆತನ ಮೇಲೆ ದ್ವೇಷ ಸಾಧಿಸುತ್ತಿದ್ದ. ಹನುಮೇಶ್ನನ್ನು ಕೊಲೆ ಮಾಡಿದ ಆರೋಪಿ ಶಂಕರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೂ ಮುನ್ನ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಪೋಸ್ಟ್
ಇನ್ನು ಹತ್ಯೆ ಮಾಡುವುದಕ್ಕೂ ಮುನ್ನ ಆರೋಪಿ ಶಂಕರ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೈಯಲ್ಲಿ ಮಚ್ಚು ಹಿಡಿದುಕೊಂಡು ನಿಂತಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದ. ಕೃತ್ಯ ಎಸಗಿದ ಬಳಿಕ ತಾನೇ ನೇರವಾಗಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.
ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.