

ಬೆಂಗಳೂರು: ಗಣೇಶೋತ್ಸವದ ಹೆಸರಿನಲ್ಲಿ ಬಿಜೆಪಿ ಕೋಮು ಪ್ರಚೋದನೆ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರವು ಗಣೇಶೋತ್ಸವದ ಮೇಲೆ ಯಾವುದೇ ಅನಗತ್ಯ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಗಣೇಶೋತ್ಸವ ಆಚರಣೆಗಳ ಮೇಲೆ ಸರ್ಕಾರ ಹಲವಾರು ನಿರ್ಬಂಧಗಳನ್ನು ವಿಧಿಸಿದೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಉತ್ಸವವನ್ನು ಶಾಂತಿಯುತವಾಗಿ ಆಚರಿಸಬೇಕು ಮತ್ತು ಮೆರವಣಿಗೆಗಳ ಸಮಯದಲ್ಲಿ ಸಂಘಟಕರು ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ಗಣೇಶ ಬಿಜೆಪಿಯ ಆಸ್ತಿಯಲ್ಲ. ಈ ಸಂಪ್ರದಾಯವನ್ನು ಬಾಲಗಂಗಾಧರ ತಿಲಕ್ ಪ್ರಾರಂಭಿಸಿದರು ಮತ್ತು ಅಂದಿನಿಂದ ಮುಂದುವರೆದಿದೆ. ನಾವು ಹಬ್ಬಕ್ಕೆ ರಜೆ ಘೋಷಿಸಿದ್ದೇವೆ ಮತ್ತು ಅದನ್ನು ಆಚರಿಸಲು ಜನರಿಗೆ ಪ್ರೋತ್ಸಾಹಿಸುತ್ತಿದ್ದೇವೆ" ಎಂದರು.
ಬಿಜೆಪಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು "ಸಮಾಜ ವಿರೋಧಿ ಶಕ್ತಿಗಳನ್ನು" ಬಳಸುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. ಅಲ್ಲದೆ ಪೊಲೀಸರಿಗೆ ಜಾಗರೂಕರಾಗಿರಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೆರವಣಿಗೆಗಳ ಸಮಯದಲ್ಲಿ ವಿದ್ಯುತ್ ಕಂಬಗಳು ಮತ್ತು ತಂತಿಗಳ ಬಗ್ಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
ಟಿ ನರಸೀಪುರದ ಪೊಲೀಸ್ ಠಾಣೆ ಮುಂದೆ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಯಾವುದೇ ವಿವಾದಗಳಿಲ್ಲದ ಸ್ಥಳಗಳಲ್ಲಿ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.