

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಿರ್ಮಿಸಿರುವ ನೂತನ ಮನೆಯ ಗೃಹಪ್ರವೇಶವನ್ನು ಗಣೇಶ ಚತುರ್ಥಿಯ ಶುಭದಿನದಂದು ಸರಳವಾಗಿ ನೆರವೇರಿಸಿದ್ದಾರೆ.
ಸೋಮವಾರ ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ನೂತನ ಮನೆಯ ಗೃಹಪ್ರವೇಶ ಸಂದರ್ಭದಲ್ಲಿ ಸಂಪ್ರದಾಯದಂತೆ ಗೋಪೂಜೆ ಮಾಡಲಾಗಿದೆ. ಅಲ್ಲದೆ ಗಣಹೋಮ ಹಾಗೂ ಪೂಜಾ ಕಾರ್ಯಕ್ರಮಗಳನ್ನು ನಡೆಸಿರುವುದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರು ಸಮಾಜವಾದಿ ಚಿಂತನೆಯ ನಾಯಕರೆಂದು ಗುರುತಿಸಿಕೊಂಡಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಧಾರ್ಮಿಕ ಆಚರಣೆಗಳಿಗಿಂತ ಸಮಾಜವಾದಿ ಸಿದ್ಧಾಂತಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತ ಬಂದಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ದೇವಾಲಯಗಳಿಗೆ ಭೇಟಿ ನೀಡುವುದು ಹಾಗೂ ಪೂಜೆ-ಪುನಸ್ಕಾರಗಳಲ್ಲಿ ಭಾಗವಹಿಸುವುದು ಅತ್ಯಂತ ಕಡಿಮೆ ಎಂಬ ಅಭಿಪ್ರಾಯ ಅವರ ಬೆಂಬಲಿಗರು ಹಾಗೂ ವಿರೋಧಿಗಳ ನಡುವೆ ಇದೆ.
ಇದೀಗ ಗೃಹ ಪ್ರವೇಶದ ವೇಳೆ ಮನೆಯ ಒಳಗಡೆ ಹಸು ಮತ್ತು ಕರುವನ್ನು ಕರೆದುಕೊಂಡು ಹೋಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಯತೀಂದ್ರ ಅವರು ಲಕ್ಷ್ಮಿದೇವಿಯ ಫೋಟೋವನ್ನು ಹಿಡಿದು ನಿಂತಿರುವ ಫೋಟೋ ವೈರಲ್ ಆಗುತ್ತಿದೆ.
ಮೈಸೂರಿನ ಕುವೆಂಪುನಗರದದಲ್ಲಿ 80*120 ಅಳತೆಯ ನಿವೇಶನದಲ್ಲಿ ಎರಡು ಅಂತಸ್ತಿನ ನೂತನ ಬಂಗಲೆಯನ್ನು ನಿರ್ಮಿಸಲಾಗಿದೆ. ಯಾವುದೇ ಅಧಿಕೃತ ಪ್ರವಾಸ ಪಟ್ಟಿ ಇಲ್ಲದೆ ಮೈಸೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಹಾಗೂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕುಟುಂಬಸ್ಥರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದರು.