

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಖ್ಯಾತ ಟ್ಯಾಟೂ ಕಲಾವಿದ ಅರ್ಜುನ್ ಅವರಿಂದ ಮಹಿಳೆಯೊಬ್ಬರು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದೂ ಅಲ್ಲದೆ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಕಳೆದ ಎರಡು ವರ್ಷಗಳ ಹಿಂದೆ ಟ್ಯಾಟೂ ಸ್ಟುಡಿಯೋವೊಂದರಲ್ಲಿ ಅರ್ಜುನ್ಗೆ ಸಂಪ್ರಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.
ಸಂಪ್ರಿತಾಗೆ ಈ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆಕೆಯ ಪತಿ ಮೃತಪಟ್ಟಿದ್ದಾರೆ ಎಂದು ಅರ್ಜುನ್ಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಅರ್ಜುನ್ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.
ಈ ಸಂದರ್ಭದಲ್ಲಿ ಸಂಪ್ರಿತಾ ಅರ್ಜುನ್ ಅವರನ್ನು ಮದುವೆಯಾಗುವುದಾಗಿ ಹೇಳಿದ್ದಳು ಎನ್ನಲಾಗಿದೆ. ಇದನ್ನು ನಂಬಿದ ಅರ್ಜುನ್ ಆಕೆಗೆ ಹಲವು ಬಾರಿ ಹಣ ನೀಡಿದ್ದಾರೆ. ಆದರೆ, ಮದುವೆಯನ್ನು ನಾಳೆ, ನಾಡಿದ್ದು ಎಂದು ಹೇಳುತ್ತಾ ಕಳೆದ ಒಂದು ವರ್ಷದಿಂದ ಮುಂದೂಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಇತ್ತೀಚೆಗೆ ಸಂಪ್ರಿತಾಗೆ ಕರೆ ಮಾಡಿದರೂ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅರ್ಜುನ್ ಆಕೆಯ ಮನೆ ಬಳಿ ತೆರಳಿದ್ದರು. ಈ ವೇಳೆ ಸಂಪ್ರಿತಾ ಮತ್ತೊಬ್ಬ ವ್ಯಕ್ತಿಯೊಂದಿಗೆ ವಿಡಿಯೋ ಕಾಲ್ನಲ್ಲಿ ಅಶ್ಲೀಲವಾಗಿ ಮಾತನಾಡುತ್ತಿರುವುದು ಕಂಡು ಬಂದಿದೆ. ಬಳಿಕ ಅರ್ಜುನ್ ಅವರು ಅದನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಜಗಳ ತೀವ್ರಗೊಂಡಿದೆ. ಈ ವೇಳೆ ಮಹಿಳೆ ಅರ್ಜುನ್ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆದರೆ, ಘಟನೆ ಬಳಿಕ ಮರ್ಯಾದೆಗೆ ಅಂಜಿದ ಅರ್ಜುನ್, ಹಲ್ಲೆ ಅಥವಾ ಜಗಳದ ಬಗ್ಗೆ ಮಾಹಿತಿ ನೀಡದೆ ಸಾಮಾಜಿಕ ಜಾಲತಾಣದಲ್ಲಿ ಇದು ಅಪಘಾತದಿಂದ ಸಂಭವಿಸಿದ ಗಾಯ ಎಂದು ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದರು ಎನ್ನಲಾಗಿದೆ.
ಅರ್ಜುನ್ ಟ್ಯಾಟೂ ಕಲಾವಿದನಾಗಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಸಿನಿಮಾಗಳಲ್ಲಿಯೂ ನಟಿಸುವ ಅವಕಾಶ ಪಡೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರು ಒಂದು ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.