

ಬೆಂಗಳೂರು: ನಗರದ ಕೋರಮಂಗಲದಲ್ಲಿ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ 46 ವರ್ಷದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 400 ಮೀಟರ್ ದೂರದಲ್ಲೇ ಈ ಘಟನೆ ನಡೆದಿದ್ದು, ಮೃತರನ್ನು ಕೊಡಗು ಜಿಲ್ಲೆಯ ಮೂಲದ ಸಲೀಂ ಅಕ್ಬರ್ (46) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಸ್ಥಳೀಯರೊಬ್ಬರು ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರು ಯಾವುದೇ ಚಲನವಲನ ಇಲ್ಲದೆ ಕುಳಿತಿರುವುದಾಗಿ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಸಲೀಂ ಅಕ್ಬರ್ ಮೃತಪಟ್ಟಿರುವುದು ದೃಢಪಟ್ಟಿದೆ.
ಬಳಿಕ ಪೊಲೀಸರು ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರ ಪ್ರಕಾರ, ಕೋರಮಂಗಲದ 8ನೇ ಬ್ಲಾಕ್ನಲ್ಲಿರುವ ಸಾಗರ್ ಫಾಸ್ಟ್ ಫುಡ್ ಹೊಟೆಲ್ ಎದುರು ಸುಮಾರು ರಾತ್ರಿ 2.30ಕ್ಕೆ ಆಡಿ ಕಾರು ಬಂದು ನಿಂತಿತ್ತು.
ಪ್ರಾಥಮಿಕ ತನಿಖೆಯಲ್ಲಿ ಸಲೀಂ ಅಕ್ಬರ್ ಅವರಿಗೆ ಹಠಾತ್ ಆರೋಗ್ಯ ಸಮಸ್ಯೆ ಉಂಟಾಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಯಾವುದೇ ದುಷ್ಕೃತ್ಯದ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.
ಆದರೆ ಸಾವಿಗೆ ನಿಖರ ಕಾರಣ ಏನೆಂಬುದು ವಿಸ್ತೃತ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವಿಶ್ಲೇಷಣೆ ಬಳಿಕವಷ್ಟೇ ಖಚಿತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಕೋರಮಂಗಲ ಪೊಲೀಸರು ಅಸಹಜ ಸಾವು ವರದಿ (UDR) ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.