ಕರ್ನಾಟಕ ಕಾಂಗ್ರೆಸ್ನಲ್ಲಿ ಕಳೆದ ಮೂರು ವರ್ಷಗಳಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ.
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
"ಅವರು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ" ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ಪಿಟಿಐಗೆ ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರಿಗೆ ರಾಜೀನಾಮೆ ನೀಡಬಹುದು.
ಗುರುವಾರ ಬೆಳಗ್ಗೆ 9ಕ್ಕೆ ಸಿದ್ದರಾಮಯ್ಯ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದು ಅದರಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಅದಾದ ನಂತರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.