ಶರದಾ ಹಗರಣ: ಸಚಿವನ ಬಂಧನ ವಿರೋಧಿಸಿ ಟಿಎಂಸಿ ಪ್ರತಿಭಟನೆ

ಪಶ್ಚಿಮ ಬಂಗಾಳ ಸಚಿವನ ಬಂಧನವನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಟಿಎಂಸಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಕೇಂದ್ರ ಸರ್ಕಾರದ ವಿರುದ್ಧ ಕೋಲ್ಕತಾದಲ್ಲಿ ಟಿಎಂಸಿ ಕಾರ್ಯಕರ್ತರಿಂದ ಪ್ರತಿಭಟನೆ (ಸಾಂದರ್ಭಿಕ ಚಿತ್ರ)
ಕೇಂದ್ರ ಸರ್ಕಾರದ ವಿರುದ್ಧ ಕೋಲ್ಕತಾದಲ್ಲಿ ಟಿಎಂಸಿ ಕಾರ್ಯಕರ್ತರಿಂದ ಪ್ರತಿಭಟನೆ (ಸಾಂದರ್ಭಿಕ ಚಿತ್ರ)

ಕೊಲ್ಕತಾ: ಬಹುಕೋಟಿ ಶರದಾ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವನ ಬಂಧನವನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಟಿಎಂಸಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಸಾವಿರಾರು ಟಿಎಂಸಿ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.

ಶರದಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದ ಸಚಿವ ಮದನ್ ಮಿತ್ರಾ ಅವರನ್ನು ಬಂಧನಕ್ಕೊಳಪಡಿಸಿದ್ದರು. ಇದನ್ನು ವಿರೋಧಿಸಿರುವ ಟಿಎಂಸಿ ಮದನ್ ಮಿತ್ರಾ ಅವರ ಬಂಧನ ದುರುದ್ದೇಶ ಪೂರಿತ ಎಂದು ಆರೋಪಿಸಿದೆ. ಬಂಧನದ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟಿಎಂಸಿ ಆರೋಪಿಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ವಿಶ್ವಸನೀಯ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಮದನ್ ಮಿತ್ರಾ ಅವರ ಬಂಧನವನ್ನು ಮಮತಾ ಬ್ಯಾನರ್ಜಿ ಅವರು ಕಟುವಾಗಿ ಟೀಕಿಸಿದ್ದು, ಬಂಧನದ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಮಮತಾ ಆರೋಪಿಸಿದ್ದಾರೆ. ಅಲ್ಲದೆ ಬಂಧನದ ವಿರುದ್ಧ ತಾವು ಪ್ರತಿಭಟನೆ ನಡೆಸಲಿದ್ದು, ಬಿಜೆಪಿ ಸರ್ಕಾರ ಬೇಕಿದ್ದರೆ ತಮ್ಮನ್ನು ಬಂಧಿಸಲಿ ಎಂದು ಮಮತಾ ಸವಾಲು ಹಾಕಿದ್ದಾರೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೃಣಮೂಲ ಕಾಂಗ್ರೆಸ್ ಪಕ್ಷದ ಶ್ರಿಂಜೋಯ್ ಬೋಸ್ ಮತ್ತು ಕುನಾಲ್ ಘೋಷ್ ಎಂಬ ಇಬ್ಬರು ಸಂಸದರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಮತ್ತೆ ತಮ್ಮದೇ ಸರ್ಕಾರದ ಸಚಿವ ಅದಕ್ಕಿಂತಲೂ ಮಿಗಿಲಾಗಿ ತಮ್ಮ ಆಪ್ತ ಬೆಂಬಲಿಗನನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ಮಮತಾ ಬ್ಯಾನರ್ಜಿ ಅವರು ವ್ಯಗ್ರಗೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ಖುದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com