ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದಾಯ ತೆರಿಗೆ ಇಲಾಖೆ ಗುರುವಾರ ವಾದ್ರಾ ಒಡೆತನದ ಸ್ಕೈಲೈಟ್ ಹಾಸ್ಪಿಟಾಲಿಟಿಗೆ ನೋಟಿಸ್ ಜಾರಿ ಮಾಡಿದೆ.
ಮೂಲಗಳ ಪ್ರಕಾರ, ಸಂಸ್ಥೆಯ ಹಣಕಾಸು ವ್ಯವಹಾರ ಮತ್ತು ಭೂ ಒಪ್ಪಂದಗಳಿಗೆ ಸಂಬಂಧಿಸಿದಂತೆ 22 ಪ್ರಶ್ನೆಗಳನ್ನೊಳಗೊಂಡ ನೋಟಿಸ್ ಅನ್ನು ಆದಾಯ ತೆರಿಗೆ ಇಲಾಖೆ ಇಂದು ವಾದ್ರಾಗೆ ಜಾರಿ ಮಾಡಿದೆ. ಅಲ್ಲದೆ ನೋಟಿಸ್ಗೆ ಎರಡು ವಾರದಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.
ಈ ಮಧ್ಯೆ, ವಾದ್ರಾಗೆ ನೋಟಿಸ್ ನೀಡರುವುದು ಆಡಳಿತಾತ್ಮಕ ಸಾಮಾನ್ಯ ಪ್ರಕ್ರಿಯೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ ಕಾಂಗ್ರೆಸ್ ಬಿಜೆಪಿ ವಾದವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇದೊಂದು ರಾಜಕೀಯ ಪಿತೂರಿ ಎಂದು ದೂರಿದೆ.
ಯಾವುದೇ ಅನುಮಾನಾಸ್ಪದ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ವಿವರಣೆ ಪಡೆಯುವುದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಜವಾಬ್ದಾರಿ. ಅದನ್ನು ಅವರು ಮಾಡಿದ್ದಾರೆ ಅಷ್ಟೆ. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಬಿಜೆಪಿ ವಕ್ತಾರ ನರಸಿಂಹರಾವ್ ಅವರು ಹೇಳಿದ್ದಾರೆ.
ಇನ್ನು ಬಿಜೆಪಿ ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಸರ್ಕಾರದ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು ಆರೋಪಿಸಿದ್ದಾರೆ.
Advertisement