ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಪ್ರಕರಣದಲ್ಲಿ ಬಿಜೆಪಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಆರ್ಎಸ್ಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಆಜಾದ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯವಾಗಿ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ. ಆಮ್ ಆದ್ಮಿ ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ಆಜಾದ್ ವಿರುದ್ಧ ತರಾತುರಿಯಲ್ಲಿ ಕ್ರಮ ತೆಗೆದುಕೊಂಡಿರಬಹುದು ಎಂದು ಆರ್ಎಸ್ಎಸ್ ಹಿರಿಯ ನಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜೇಟ್ಲಿ ವಿರುದ್ಧದ ಕೀರ್ತಿ ಆಜಾದ್ ಆರೋಪ ಹೊಸದೇನಲ್ಲ. ಬಿಜೆಪಿ ನಾಯಕರು ಇದನ್ನು ಬೇರೆ ರೀತಿಯಿಂದ ಪರಿಹರಿಸಿಕೊಳ್ಳಬಹುದಿತ್ತು. ಆಜಾದ್ ಅವರನ್ನು ಅಮಾನತು ಮಾಡುವ ಮೂಲಕ ಪ್ರಕರಣದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸದಂತಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಆರ್ಎಸ್ಎಸ್ ನಾಯಕರೊಬ್ಬರು ಹೇಳಿದ್ದಾರೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ನಡೆದ ಭ್ರಷ್ಟಾಚಾರದಲ್ಲಿ ಜೇಟ್ಲಿ ಅವರ ಪಾತ್ರ ಇದೆ ಎಂದು ಬಹಿರಂಗವಾಗಿ ಆರೋಪಿಸಿದ್ದ ಆಜಾದ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.