ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದ ದೆಹಲಿ ಸರ್ಕಾರದ ಆದೇಶವನ್ನು ಗುರುವಾರ ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ನಿರ್ಣಯಕ್ಕೆ ಸಹಿ ಹಾಕಿಲ್ಲ ಎಂಬ ಕಾರಣಕ್ಕೆ ದೆಹಲಿ ಸರ್ಕಾರ ಇಬ್ಬರು ಗೃಹ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಆದರೆ ಈ ಅಮಾನತು ಆದೇಶವನ್ನು ಕೇಂದ್ರ ಗೃಹ ಸಚಿವಾಲಯ ಇಂದು ರದ್ದುಗೊಳಿಸಿದೆ.
ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವ ದೆಹಲಿ ಸರ್ಕಾರ ಕ್ರಮ ಸರಿಯಲ್ಲ. ಇದು ಕಾನೂನು ಬಾಹಿರ ನಡೆ ಎಂದು ಕೇಂದ್ರ ಗೃಹಸಚಿವಾಲಯ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೆ ಕೇಜ್ರಿವಾಲ್ ಮತ್ತು ಕೇಂದ್ರ ಸರ್ಕಾರದ ನಡುವೆ ಜಂಗಿಕುಸ್ತಿ ಮುಂದುವರಿದಂತಾಗಿದೆ.
ಈ ಮಧ್ಯೆ ದೆಹಲಿ ಸರ್ಕಾರದ ಕ್ರಮವನ್ನು ಖಂಡಿಸಿ 70 ಐಎಎಸ್ ಅಧಿಕಾರಿಗಳು ಅರ್ಧ ದಿನ ರಜೆ ಹಾಕಿ, ಪ್ರತಿಭಟನೆ ನಡೆಸಿದರು.