ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶದಿಂದ ವಂಚಿತರಾದ ಬೆಂಗಳೂರಿನ ವ್ಯಕ್ತಿಯೊಬ್ಬರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ಪರ್ಧೆಗೆ ಅವಕಾಶ ನಿರಾಕರಿಸಿದ್ದರ ವಿರುದ್ಧ ಹೆಬ್ಬಾಳದ ಎಸ್. ರಾಘವನ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ. 2013ರ ಫೆಬ್ರವರಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಶ್ರೀರಂಗಂ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಘವನ್ ನಿರ್ಧರಿಸಿದ್ದರು.
ತಮಿಳುನಾಡಿನ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಎಂಬ ಕಾರಣಕ್ಕಾಗಿ ನಾಮಪತ್ರ ತಿರಸ್ಕರಿಸಲಾಗಿತ್ತು. ಹೀಗಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಅವರು, ಸಂಸದೀಯ ಚುನಾವಣೆಯಲ್ಲಿ ದೇಶದ ಯಾವುದೇ ಭಾಗದ ವ್ಯಕ್ತಿಯೂ ಸ್ಪರ್ಧಿಸಬಹುದು. ಆದರೆ ಅಸೆಂಬ್ಲಿ ಚುನಾವಣೆಯಲ್ಲಿ ಇಂತಹ ಅವಕಾಶವಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
Advertisement