ಬೆಂಗಳೂರು: ಸುಗಮ ಸಂಚಾರ ವ್ಯವಸ್ಥೆ ಮತ್ತು ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ನಗರದಲ್ಲಿ ಮತ್ತಷ್ಟು ಸಂಚಾರ ಠಾಣೆ ಆರಂಭಿಸಲಾಗುವುದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಬುಧವಾರ ಕಂಠೀರವ ಕ್ರೀಡಾಂಗಣದಲ್ಲಿ ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ `26ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ'ಕ್ಕೆ ಚಾಲನೆ ನೀಡಿದ ಜಾರ್ಜ್, ನಗರದಲ್ಲಿ 1.30 ಕೋಟಿ ಜನರಿದ್ದು, 50 ಲಕ್ಷಕ್ಕೂ ಅ„ಕ ವಾಹನಗಳು ಓಡಾಡುತ್ತಿವೆ. ಇವುಗಳ ನಿರ್ವಹಣೆ ಸುಲಭವಲ್ಲ. ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ಪೊಲೀ ಸರ ಮೇಲೆ ಒತ್ತಡ ಹೆಚ್ಚುತ್ತಿದೆ. ಅದನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಇರುವ 44 ಠಾಣೆಗಳು ಸಾಲದು. ಹೀಗಾಗಿ ಠಾಣೆ ಹಾಗೂ ಸಿಬ್ಬಂದಿ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಇಲಾಖೆಯಲ್ಲಿ ಕಾರ್ಯ ಸಿದ್ಧ ಪಡಿಸಲಾಗುತ್ತಿದೆ ಎಂದರು.
ರಸ್ತೆ ಸುರಕ್ಷತೆ ಬಗ್ಗೆ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಕಳೆದ ವರ್ಷ 41 ಸಾವಿರ ರಸ್ತೆ ಅಪಘಾತಗಳು ಸಂಭವಿಸಿದ್ದು,9700 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಗರದಲ್ಲೇ 5741 ರಸ್ತೆ ಅಪಘಾತಗಳು ಸಂಭವಿಸಿದ್ದು, 729 ಮಂದಿ ಮೃತಪಟ್ಟಿದ್ದಾರೆ. 4 ಸಾವಿರ ಮಂದಿ ಗಾಯಗೊಂಡಿದ್ದಾರೆ ಎಂದರು.
ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಸಂಚಾರ ದಟ್ಟಣೆ ನಿರ್ವಹಣೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಠಾಣೆಗಳು, ಅಧಿಕಾರಿ, ಸಿಬ್ಬಂದಿ ಹಾಗೂ ಟ್ರಾಫಿಕ್ ವಾರ್ಡನ್ಗಳಿಗೆ ಪಾರಿತೋಷಕ ನೀಡಿ ಗೌರವಿಸಲಾಯಿತು. `ಸುರಕ್ಷತೆ ಕೇವಲ ಘೋಷಣೆ ಅಲ್ಲ, ಅದು ಜೀವನ ಶೈಲಿ' ಎಂಬ ಧ್ಯೇಯ ವಾಕ್ಯದೊಂದಿಗೆ 26ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಜ.28ರಿಂದ ಫೆ.3ವರೆಗೆ ಹಮ್ಮಿಕೊಳ್ಳಲಾಗಿದೆ.
ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಅರಿವು ಮೂಡಿಸುವ ಪ್ರಬಂಧ ಸ್ಪರ್ಧೆ, ಕ್ವಿಜ್, ಚರ್ಚಾ ಸ್ಪರ್ಧೆ ಮತ್ತು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಸಂಚಾರ ಪೊಲೀಸರು, ಟ್ರಾಪಿsಕ್ ವಾರ್ಡನ್ಗಳು ಸಂಚಾರ ಸುರಕ್ಷತೆ ಬಗ್ಗೆ ವಿವಿಧೆಡೆ ಕಾರ್ಯಕ್ರಮ ನಡೆಸಲಿದ್ದಾರೆ. ನಗರದ 641 ಶಾಲೆಗಳ 1.61 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಆಕರ್ಷಕ ಪಥಸಂಚಲನ: ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಕಂಠೀರವ ಕ್ರೀಡಾಂಗಣದಲ್ಲಿ ರಸ್ತೆ ಸುರಕ್ಷತೆ ಕುರಿತ ಬ್ಯಾನರ್ ಹಾಗೂ ಬಿತ್ತಿಪತ್ರಗಳನ್ನು ಹಿಡಿದುಕೊಂಡು ಆಕರ್ಷಕ ಪಥಸಂಚಲನ ನಡೆಸಿದರು.
Advertisement