ನವದೆಹಲಿ: ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಸತೀಶ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವನ್ನು ವಿರೋಧಿಸಿರುವ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘಟನೆಯು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶುಕ್ರವಾರ ಆಗ್ರಹಿಸಿದೆ.
ದೆಹಲಿಯ ಸೇಂಟ್ ಸ್ಟೀಫನ್ ಕಾಲೇಜಿನ ರಾಸಾಯನಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸತೀಶ್ ಕುಮಾರ್ ಎಂಬುವವರು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆರೋಪಿಯನ್ನು ಕಾಲೇಜಿನ ಪ್ರಾಂಶುಪಾಲ ವಲ್ಸೋನ್ ತಂಪು ಅವರೇ ರಕ್ಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಬೆಂಬಲಕ್ಕೆ ಬಂದಿರುವ ಎಐಡಿಡಬ್ಲ್ಯೂಎ ಸಂಘಟನೆಯು, ವಿದ್ಯಾರ್ಥಿನಿಗೆ ಪ್ರಕರಣ ಸಂಬಂಧ ಆರೋಪಿಗಳು ಜೀವ ಬೆದರಿಕೆ ನೀಡಿದ್ದು, ಅಪಾಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ. ಹೀಗಾಗಿ ಸರ್ಕಾರ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕಿದ್ದು, ಕೂಡಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
Advertisement