ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ.ಜಯಲಲಿತಾ ಅವರು ಶನಿವಾರ ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉತ್ತರ ಚೆನ್ನೈನ ರಾಧಾಕೃಷ್ಣನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಿಪಿಐ ನಾಯಕ ಸಿ ಮಹೇಂದ್ರನ್ ಮತ್ತು ಸಾಮಾಜಿಕ ಕಾರ್ಯಕರ್ತ ಕೆ ಆರ್ ರಾಮಸ್ವಾಮಿ ಸೇರಿದಂತೆ 27 ಅಭ್ಯರ್ಥಿಗಳನ್ನು 1,50,722 ಮತಗಳಿಂದ ಪರಾಭವಗೊಳಿಸಿದ್ದ ಜಯಲಲಿತಾ ಅವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ತಮಿಳುನಾಡು ವಿಧಾನಸಭೆಯಲ್ಲಿರುವ ತಮ್ಮ ಕೊಠಡಿಯಲ್ಲಿ ವಿಧಾನಸಭಾಧ್ಯಕ್ಷ ಪಿ.ಧನಪಾಲ್ ಅವರು ಜಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಕಳೆದ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಜಯಲಲಿತಾ ಅವರ ಶಾಸಕತ್ವ ಅನರ್ಹಗೊಂಡಿತ್ತು. ಪ್ರಕರಣ ಸಂಬಂಧ ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಾ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಆದರೆ, ನಂತರದಲ್ಲಿ ಕರ್ನಾಟಕ ಹೈಕೋರ್ಟ್ ಜಯಾ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿದ್ದರಿಂದ ಜಯಾ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement