ಮುಂಬೈ: ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಪಡೆದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈಗ ಬಂಧನ ಭೀತಿಯಲ್ಲಿರುವ ತೀಸ್ತಾ ಮುಂಬೈ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
ತೀಸ್ತಾ ಹಾಗೂ ಅವರ ಪತಿ ಜಾವೇದ್ ಆನಂದ್ ಜುಲೈ 17ರಂದು ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಸಿಬಿಐ ಕೋರ್ಟ್ ವಿಶೇಷ ನ್ಯಾಯಾಧೀಶ ಅನಿಸ್ ಖಾನ್ ಅವರು ಸಾಮಾಜಿಕ ಕಾರ್ಯಕರ್ತೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿಸಿದ್ದಾರೆ.
ಸ್ವಯಂ ಸೇವಾ ಸಂಸ್ಥೆ ನಡೆಸುತ್ತಿರುವ ತೀಸ್ತಾ ಸೆಟಲ್ವಾಡ್ ಅವರು ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಪಡೆದಿರುವ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ (ಎಫ್ ಇಆರ್ ಎ) ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಗುಜರಾತ್ ಗಲಭೆ ಸಂತ್ರಸ್ತರ ಪರಿಹಾರ ನಿಧಿಯನ್ನು ತೀಸ್ತಾ ಮತ್ತು ಪತಿ ಐಶಾರಾಮಿ ಜೀವನ ನಡೆಸಲು ಬಳಸಿಕೊಂಡಿದ್ದು, ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಗುಜರಾತ್ ಪೊಲೀಸರು ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಗೆ ವರದಿ ನೀಡಿದ್ದರು.
Advertisement