ಬೆಂಗಳೂರು: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ನಿಧನರಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ 7 ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು ರಾಜ್ಯದಲ್ಲಿಯೂ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಅಬ್ದುಲ್ ಕಮಂ ನಿಧನದ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಘೋಷಣೆಯಾಗಿರುವುದರಿಂದ ರಾಜ್ಯದ ಎಲ್ಲಾ ಪ್ರಮುಖ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.
ಇನ್ನು ರಾಜ್ಯಕ್ಕೆ ಆಗಮಿಸಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹ ತುರ್ತಾಗಿ ನವದೆಹಲಿಗೆ ವಾಪಸ್ ತೆರಳಲಿದ್ದಾರೆ. ರಾಷ್ಟ್ರಾದ್ಯಂತ ಶೋಕಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ನವದೆಹಲಿಗೆ ವಾಪಸ್ಸಾಗುತ್ತಿದ್ದಾರೆ. ರಾಜ್ಯದಲ್ಲಿ ನಿಗದಿಯಾಗಿದ್ದ ರಾಷ್ಟ್ರಪತಿಗಳ ಕಾರ್ಯಕ್ರಮಗಳೆಲ್ಲವೂ ರದ್ದಾಗಿದೆ.
ಇನ್ನು ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ಗುವಾಹಟಿಯಿಂದ ನಾಳೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ತರಲಾಗುತ್ತದೆ. ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದ್ದು, ಕಲಾಂ ಅವರ ಹುಟ್ಟೂರು ತಮಿಳು ನಾಡಿನ ರಾಮೇಶ್ವರಂ ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಅಂತ್ಯಕ್ರಿಯೆ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
Advertisement