ನವದೆಹಲಿ: ಸಹಜಾನಪುರ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಉತ್ತರ ಪ್ರದೇಶ ಸಚಿವನ ಅಕ್ರಮಗಳ ಬಗ್ಗೆ ಬರೆದಿದ್ದ ಜಗೇಂದ್ರ ಸಿಂಗ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಚಿವ ರಾಮಮೂರ್ತಿ ವರ್ಮಾ ಅಕ್ರಮಗಳ ಬಗ್ಗೆ ಫೇಸ್ಬುಕ್ನಲ್ಲಿ ಬರೆದಿದ್ದಕ್ಕಾಗಿ ಜಗೇಂದ್ರ ಸಿಂಗ್ ಅವರನ್ನು ಸಚಿವರ ಬೆಂಬಲಿಗರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಪತ್ರಕರ್ತನ ಕುಟುಂಬದವರು ಆರೋಪಿಸಿದ್ದಾರೆ.
ಈ ಸಂಬಂಧ ಈಗಾಗಲೇ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಆದರೂ ರಾಮಮೂರ್ತಿ ವರ್ಮಾ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ. ಇದರಿಂದ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿಲ್ಲ ಎಂಬುದು ಪತ್ರಕರ್ತನ ಕುಟುಂಬದ ಆರೋಪ.
Advertisement