ನವದೆಹಲಿ: ಅಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿನ್ನೆ ಹೊರಡಿಸಿದ್ದ ಅಧಿಸೂಚನೆ ಬಗ್ಗೆ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಶನಿವಾರ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆ ಕೇಳಿದೆ.
ಅಧಿಕಾರಿಗಳ ನೇಮಕ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಿತ್ತಾಟಕ್ಕೆ ತಾತ್ಕಾಲಿಕ ತೆರೆ ಎಳೆದಿದ್ದ ಕೇಂದ್ರ ಸರ್ಕಾರ, ಉನ್ನತ ಅಧಿಕಾರಿಗಳ ನೇಮಕ ಮತ್ತ ವರ್ಗಾವಣೆ ಅಧಿಕಾರ ಗವರ್ನರ್ಗೆ ಇದೆ ಎಂದು ಸ್ಪಷ್ಟಪಡಿಸಿತ್ತು.
ಈ ಸಂಬಂಧ ವಿಶೇಷ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗೃಹ ಸಚಿವಾಲಯ, ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆಯುವುದು ಕಡ್ಡಾಯವಲ್ಲ ಎಂದು ಹೇಳಿತ್ತು.
ಇನ್ನು ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನರೇಂದ್ರ ಮೋದಿ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಅಧಿಸೂಚನೆ ದಿಲ್ಲಿಯ ಜನಾದೇಶವನ್ನು ಅವಮಾನಿಸುವಂತಿದೆ ಎಂದು ಹೇಳಿದ್ದರು.
Advertisement