ನವದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಬೆದರಿಕೆಯ ನೆರಳಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಪಿಸಿದ್ದಾರೆ.
ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ ತಮ್ಮ ವಿರುದ್ಧ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರದೀಪ್ ಬೈಜ್ಬಲ್ ಮಾಡಿರುವ ಆರೋಪ ಸಂಬಂಧ ಮೌನ ಮುರಿದಿರುವ ಸಿಂಗ್ ಈ ಎಲ್ಲಾ ಆರೋಪ ಸತ್ಯಕ್ಕೆ ದೂರವಾದದ್ದು. ಈ ಎಲ್ಲಾ ಆರೋಪಗಳಿಂದ ಕ್ಲೀನ್ ಚಿಟ್ ಪಡೆದು ಹೊರಬರುವೆ ಎಂದು ಸಿಂಗ್ ವಿಶ್ವಾಸ ವ್ಯಕ್ತ ಪಡಿಸಿದರು.
ನವದೆಹಲಿಯಲ್ಲಿ ನಡೆದ ಎನ್ ಎಸ್ ಯು ಐ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರದೀಪ್ ಬೈಜ್ಪಲ್ ಮಾಡಿರುವ ಆರೋಪಗಳು ನಿರಾಧಾರ ಎಂದು ಸಮರ್ಥಿಸಿಕೊಂಡಿದ್ದಾರೆ.
ನನ್ನ ಸ್ವಂತ ವ್ಯವಹಾರಗಳಿಗೆ ನಾನು ಯಾವತ್ತೂ ಸರ್ಕಾರಿ ಕಚೇರಿಯನ್ನು ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿಲ್ಲ ಎಂದು ಪ್ರದೀಪ್ ಬೈಜ್ಬಲ್ ಆರೋಪಕ್ಕೆ ಸ್ಪಷ್ಟನೆ ನೀಡಿದರು.
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ದೇಶದ ಜನತೆಯ ಗಮನ ಬೇರೆಡೆ ಸೆಳೆಯಲು ಅನಾವಶ್ಯಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಯುಪಿಎ ಸರ್ಕಾರದ ಯೋಜನೆಗಳನ್ನೇ ಮರುನಾಮಕರಣ ಮಾಡಿ ತಮ್ಮದಂ ಯೋಜನೆ ಎಂದು ಎನ್ ಡಿಎ ಸರ್ಕಾರ ಬಿಂಬಿಸುತ್ತಿದೆ ಎಂದರು.
Advertisement