ಗುರುತಿನ ಚೀಟಿ ತೋರಿಸದೆ ಮತದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ ಚಲಾಯಿಸಿದ್ದು, ತಮ್ಮ ಸ್ವಕ್ಷೇತ್ರ ಮೈಸೂರು ಸಿದ್ದರಾಮಯ್ಯನ ಹುಂಡಿಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಇಂದು ಮಧ್ಯಾಹ್ನ ಮೈಸೂರಿಗೆ ಆಗಮಿಸಿ ಸಿದ್ದರಾಮಯ್ಯ ಅವರು, ಸಿದ್ದರಾಮಯ್ಯನ ಹುಂಡಿಯಲ್ಲಿನ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿದರು. ಈ ವೇಳೆ ಮತಗಟ್ಟೆಯಲ್ಲಿದ್ದ ಅಧಿಕಾರಿಯೊಬ್ಬರು ಗುರುತಿನ ಚೀಟಿ ತೋರಿಸುವಂತೆ ಕೇಳಿದ್ದಾರೆ. ಆಗ ಗುರುತಿನ ಚೀಟಿ ತೋರಿಸದ ಸಿದ್ದರಾಮಯ್ಯ ಅವರು ನನಗೆ ನಾನೇ ಐಡೆಂಟಿಫಿಕೇಶನ್ ಎಂಬ ಉತ್ತರ ನೀಡಿ ಮತ ಚಲಾಯಿಸಿದ್ದಾರೆ.
ಮತ ಚಲಾಯಿಸಲು 21 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ನೀಡುವುದು ಮತದಾರನ ಆದ್ಯ ಕರ್ತವ್ಯ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ದಾಖಲೆ ತೋರಿಸದೆ ಮತ ಚಲಾಯಿಸಿರುವುದರಿಂದ ಸಂವಿಧಾನ ಹಾಗೂ ಕಾನೂನು ಗಾಳಿಗೆ ತೂರಿದಂತಾಗಿದೆ ಎಂದು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಎಲ್ಲರಿಗೂ ಒಂದೇ ಕಾನೂನು. ಎಲ್ಲರೂ ಸಂವಿಧಾನ ಹಾಗೂ ಕಾನೂನನ್ನು ಗೌರವಿಸುವುದು ಆದ್ಯ ಕರ್ತವ್ಯ. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯರವರು ಈ ರೀತಿ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ