1984 ರ ದಂಗೆಯಲ್ಲಿ ಜನರನ್ನು ರಕ್ಷಿಸಲು ವಿಫಲವಾಗಿದ್ದ ಸರ್ಕಾರ: ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್
ನವದೆಹಲಿ: 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಂದಿನ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.
ಸಿಖ್ ವಿರೋಧಿ ದಂಗೆಯಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, ದಂಗೆ ನಡೆದಿದ್ದಕ್ಕೆ ಕಾಂಗ್ರೆಸ್ ಸರ್ಕಾರವನ್ನೇ ದೂಷಿಸಲಾಗಿತ್ತು. ಈ ಬಗ್ಗೆ ಮಾತನಾಡಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್, ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ಭಾರತ ಸರ್ಕಾರವೊಂದು ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿತ್ತು ಎಂದು ಆರೋಪಿಸಿದ್ದಾರೆ.
1984 ದಂಗೆಗೆ ಸಂಬಂಧಿಸಿದಂತೆ ನಿರಂಜನ್ ಮುಖ್ಯೋಪಾಧ್ಯಾಯ ಬರೆದಿರುವ ಅನ್ಟೋಲ್ಡ್ ಅಗೊನಿ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಂದೀಪ್ ದೀಕ್ಷಿತ್ ಸರ್ಕಾರ ವಿಫಲವಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿತ್ತು. ಆದರೆ ಸರ್ಕಾರ ಇದರಲ್ಲಿ ವಿಫಲವಾಗಿದೆ. ನಡೆದಿರುವ ಘಟನೆಗಳನ್ನು ಮರೆಯದೇ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಸಹ ಒಂದು ರೀತಿಯ ಪ್ರಮುಖ ಜವಾಬ್ದಾರಿ ಎಂದು ಹಿರಿಯ ಅಂಕಣಗಾರ್ತಿ ಊರ್ವಶಿ ಬಟಾಲಿಯಾ ಅಭಿಪ್ರಾಯಪಟ್ಟಿದ್ದಾರೆ.