ನವದೆಹಲಿ: ಪ್ರಾಚೀನ ಪವಿತ್ರಗ್ರಂಥಗಳೆಂದೇ ಕರೆಯಲ್ಪಡುವ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಯಲ್ಲಿನ ಅಂಶಗಳನ್ನು ಶಾಲಾ-ಕಾಲೇಜು ಪಠ್ಯಗಳಲ್ಲಿ ಸೇರಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಈಗಾಗಲೇ ಕೇಂದ್ರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಂಸ್ಕೃತಿ ಸಚಿವಾಲಯದಿಂದ ಈ ಬಗ್ಗೆ ರೂಪುರೇಷೆಗಳು ಸಿದ್ದಗೊಳ್ಳುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲಿಯೇ ಈ ಮೂರು ಪುಸ್ತಕಗಳ ಅಂಶಗಳು ಶಾಲಾ-ಕಾಲೇಜು ಪಠ್ಯದಲ್ಲಿ ಸ್ಥಾನ ಪಡೆಯಲಿವೆ. ಪ್ರಾಚೀನ ಸಂಸ್ಕೃತಿಯನ್ನು ಯುವ ಜನತೆಗೆ ಪರಿಚಯಿಸುವ ಹಾಗೂ ನೈತಿಕ ಮೌಲ್ಯಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜು ಪಠ್ಯದಲ್ಲಿ ರಾಮಾಯಣ, ಮಹಾಭಾರತ ಹಾಗೂ ಭಗವದ್ಗೀತೆಯ ಅಂಶಗಳನ್ನು ಅಳವಡಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಕೇಂದ್ರ ಸಂಸ್ಕೃತಿ ಖಾತೆಯ ಸಹಾಯಕ ಸಚಿವ ಮಹೇಶ್ ಶರ್ಮಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು "ಶಾಲಾ-ಕಾಲೇಜು ಪಠ್ಯದಲ್ಲಿ ಭಾರತೀಯ ಸಂಸ್ಕೃತಿಗೆ ಸಂಬಂಧಿಸಿದ ವಿಚಾರಗಳನ್ನು ಅಳವಡಿಸುವ ನಿಟ್ಟಿನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಂಸ್ಕೃತಿ ಸಚಿವಾಲಯದೊಂದಿಗೆ ಚರ್ಚೆ ನಡೆಸಲಾಗಿದೆ. ನಶಿಸಿ ಹೋಗುತ್ತಿರುವ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ತರುವ ನಿಟ್ಟಿನಲ್ಲಿ ಎನ್ ಡಿಎ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಇಲಾಖೆ ಆ ಬಗ್ಗೆ ಅಗತ್ಯ ರೂಪುರೇಷೆ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗ ಕೇಳಿಬಂದಿರುವ ಟೀಕೆಗಳ ಕುರಿತು ಉತ್ತರಿಸಿದ ಶರ್ಮಾ ಅವರು, ನಿರ್ದಿಷ್ಟ ಕುಟುಂಬವೊಂದು 60ಕ್ಕೂ ಹೆಚ್ಚು ವರ್ಷಗಳ ಕಾಲ ದೇಶವನ್ನಾಳುವ ಮೂಲಕ ಇಲ್ಲಿನ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿತ್ತು. ಆ ಅವಧಿಯಲ್ಲಿ ಮರೆಯಾಗಿ ಹೋಗಿರುವ, ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣ ವ್ಯವಸ್ಥೆಯನ್ನು ಮರಳಿ ಜಾರಿಗೆ ತರಲು ಎನ್ಡಿಎ ಕಾರ್ಯಪ್ರವೃತ್ತವಾಗಲಿದೆ. ನಮ್ಮ ಸಂಸ್ಕೃತಿ, ನೈತಿಕ ಮೌಲ್ಯಗಳು ಹಾಗೂ ರಾಮಾಯಣ, ಮಹಾಭಾರತ, ಭಗವದ್ಗೀತೆ ಮತ್ತಿತರ ಪುರಾಣ ಗ್ರಂಥಗಳ ಬಗ್ಗೆ ಯುವ ಜನರಲ್ಲಿ ತಿಳಿವಳಿಕೆ ಮೂಡಿಸಬೇಕೆಂಬುದೇ ನಮ್ಮ ಬಯಕೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ಈ ನಿರ್ಧಾರ ವಿವಾದಕ್ಕೀಡಾಗುವ ಸಾಧ್ಯತೆ ಇದ್ದು, ಅದಾಗಲೇ ವಿಪಕ್ಷಗಳು ಸರ್ಕಾರದ ನಡೆಯನ್ನು ಟೀಕಿಸಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುತ್ತಿದ್ದಾರೆ ಎಂದು ಆರೋಪಿಸುತ್ತಿವೆ.
Advertisement