ನವದೆಹಲಿ: ಭೂಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನೀವು ಅಧಿಕಾರದಲ್ಲಿದ್ದಾಗ ರೈತರಿಗೆ ನಾಲ್ಕು ಪಟ್ಟು ಪರಿಹಾರ ನೀಡದೆ ಮತ್ತು ಯಾವುದೇ ಸಾಮಾಜಿಕ ಪರಿಣಾಮದ ಕುರಿತು ಅಧ್ಯಯನ ನಡೆಸದೇ ಲಕ್ಷಾಂತರ ಎಕರೆ ಭೂಮಿಯನ್ನು ವಶಪಡಿಸಿಕೊಂಡಿದ್ದೀರಿ ಎಂದು ನಾಯ್ಡು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಗೆ ಕಾಂಗ್ರೆಸ್ ಉಪಾಧ್ಯಕ್ಷರ ಪ್ರಮಾಣ ಪತ್ರ ಬೇಕಾಗಿಲ್ಲ. 'ಅದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ' ಎಂದರು.
ರೈತರ ಒಂದು ಇಂಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನಾನು ಬಿಡಲ್ಲ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ನಿಮ್ಮ ಒಂದು ಇಂಚಿನ ಮಾನದಂಡವೇನು? ಈಗಾಗಲೇ ನೀವು ಲಕ್ಷಾಂತರ ಎಕರೆ ಭೂಮಿ ಸ್ವಾಧೀನಮಾಡಿಕೊಂಡಿದ್ದೀರಿ. ಅದಕ್ಕೆ ಉತ್ತಮ ಉದಾಹರಣೆ ಹರಿಯಾಣ ಮತ್ತು ಆಂಧ್ರಪ್ರದೇಶ. ಈಗ ಒಂದು ಇಂಚು ಭೂಮಿ ಸ್ವಾಧೀನಪಡಿಸಿಕೊಳ್ಳಲು ಬಿಡಲ್ಲ ಎನ್ನುತ್ತಿದ್ದೀರಿ ಎಂದು ನಾಯ್ಡು ವಾಗ್ದಾಳಿ ನಡೆಸಿದರು.
Advertisement