ನವದೆಹಲಿ: ಭಾರತದೊಂದಿಗಿನ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಂಡಿದೆ ಎಂದು ಪಾಕ್ ಹೈ ಕಮಿಷನರ್ ಅಬ್ದುಲ್ ಬಸಿತ್ ಹೇಳಿಕೆ ನೀಡಿದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಪಾಕಿಸ್ತಾನ, ಭಾರತ ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ದ್ವಿಪಕ್ಷೀಯ ಮಾತುಕತೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ನಫೀಸ್ ಜಕಾರಿಯಾ, ಭಾರತದೊಂದಿಗಿನ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ, ಭಾರತ-ಪಾಕ್ ಸಂಬಂಧವನ್ನು ಉತ್ತಮಗೊಳಿಸಲು ಮಾತುಕತೆಯೇ ಉತ್ತಮ ಆಯ್ಕೆ ಎಂದು ಹೇಳಿದ್ದಾರೆ.
ಜನವರಿ ತಿಂಗಳಲ್ಲಿ ಭಾರತ- ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಮಾತುಕತೆ ನಡೆಯಬೇಕಿತ್ತು. ಆದರೆ ಪಠಾಣ್ ಕೋಟ್ ದಾಳಿ ನಡೆದ ಹಿನ್ನೆಲೆಯಲ್ಲಿ ಮಾತುಕತೆ ನಡೆದಿರಲಿಲ್ಲ.ನವದೆಹಲಿಯಲ್ಲಿ ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅಬ್ದುಲ್ ಬಸಿತ್, "ನನಗೆ ತಿಳಿದಿರುವ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಸದ್ಯ ಉಭಯ ದೇಶಗಳ ವಿದೇಶ ಕಾರ್ಯದರ್ಶಿಗಳ ಮಟ್ಟದ ಯಾವುದೇ ಸಭೆ ನಿಗದಿಯಾಗಿಲ್ಲ' ಎಂದಿದ್ದರು. ಅಬ್ದುಲ್ ಬಸಿತ್ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದ ಅಜಿತ್ ದೋವಲ್ ಅಬ್ದುಲ್ ಬಸಿತ್ ಹೇಳಿಕೆ ತಳ್ಳಿ ಹಾಕಿ ಇಲ್ಲವೇ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದಿದ್ದರು.
Advertisement