ರಾಂಚಿ: ಪ್ರಧಾನಿ ನರೇಂದ್ರ ಮೋದಿ ಏ.23 ರಂದು ಜಾರ್ಖಂಡ್ ನಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮ್ಮೇಳನವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಜಮ್ಶೆಡ್ ಪುರದ ಟಾಟಾ ಕ್ರೀಡಾಂಗಣದಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು, ದೇಶಾದ್ಯಂತ ಸುಮಾರು 3,000 ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂಬ ನಿರೀಕ್ಷೆ ಇದೆ. ಪಂಚಾಯತ್ ರಾಜ್ ಪ್ರತಿನಿಧಿಗಳ ಜೊತೆಯಲ್ಲಿ ರೇಡಿಯೋ/ ದೂರದರ್ಶನದ ಮೂಲಕ ಪ್ರಧಾನಿ ಮೋದಿ 2,58,000 ಗ್ರಾಮಸಭೆಗಳನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.
ಪಂಚಾಯತ್ ರಾಜ್ ವ್ಯವಸ್ಥೆಯನ್ನು ದೇಶಾದ್ಯಂತ ಬಲಪಡಿಸುವುದು, ಗ್ರಾಮೀಣ ಭಾರತದ ಅಭಿವೃದ್ಧಿ, ಕೃಷಿಕರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು ಸಮ್ಮೇಳನದ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಮ್ಶೆಡ್ ಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಪ್ರತಿಭಟನೆ: ಪ್ರಧಾನಿ ನರೇಂದ್ರ ಮೋದಿ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಜಾರ್ಖಂಡ್ ನ ಜೆಜೆಎಂ ಪಕ್ಷ ಪ್ರತಿಭಟನೆ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಡೊಮಿಸೈಲ್ ನೀತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಪೊರೇಟ್ ಸಂಸ್ಥೆಗೆ ಸೇರಿದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಜೆಜೆಎಂ ಪ್ರತಿಭಟನೆ ನಡೆಸಿದೆ.
Advertisement