ಜಲಂಧರ್: ಹಿರಿಯ ಆರ್ ಎಸ್ ಎಸ್ ಮುಖಂಡ ಹಾಗೂ ನಿವೃತ್ತ ಬ್ರಿಗೇಡಿಯರ್ ಜಗದೀಶ್ ಗಗ್ನೇಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯಂತೆ ಶನಿವಾರ ರಾತ್ರಿ ತಮ್ಮ ಪತ್ನಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಜ್ಯೋತಿಚೌಕ್ ಬಳಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಜಗದೀಶ್ ಅವರ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡೇಟು ಬಿದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರ ಸಹಾಯದಿಂದ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಸ್ತುತ ಅವರನ್ನು ತುರ್ತು ನಿಗಾಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಜಲಂಧರ್ ಪೊಲೀಸರು ಈ ವರೆಗೂ ಯಾರನ್ನು ಬಂಧಿಸಿಲ್ಲದಿದ್ದರೂ, ಅಲ್ಲದೆ ಆರೋಪಿಗಳ ಬಂಧನಕ್ಕೆ ವ್ಯಾಪಕ ಶೋಧ ನಡೆಸಿದ್ದಾರೆ. ರಸ್ತೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ.
ಇನ್ನು ಘಟನೆಯನ್ನು ಪಂಜಾಬ್ ಉಪ ಮುಖ್ಯಮಂತ್ರಿ ಸುಖ್ ಬೀರ್ ಬಾದಲ್ ಅವರು ಖಂಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಜಗದೀಶ್ ಅವರ ಮೇಲಿನ ದಾಳಿ ಖಂಡನೀಯ ಎಂದು ಹೇಳಿದ್ದಾರೆ. ಈ ಘಟನೆ ಬೆನ್ನಲ್ಲೇ ದೆಹಲಿಯಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಗೆ ಒದಗಿಸಲಾಗಿರುವ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Advertisement