ಅಹಮದಬಾದ್: ಗುಜರಾತ್ ನ ಉನಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸ್ ಭಾವನಗರಕ್ಕೆ ಮರಳುತ್ತಿದ್ದ ದಲಿತರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರು 22 ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಸುಮಾರು 20 ಮಂದಿ ದಲಿತರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಉನಾ ಪಟ್ಟಣದ ಸಮ್ತರ್ ಗ್ರಾಮದಲ್ಲಿ ನಡೆದಿತ್ತು.
ಘಟನೆ ಸಂಬಂಧ ನಾವು 22 ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಅವರ ವಿರುದ್ಧ ದಂಗೆ, ದಲಿತರ ಮೇಲೆ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂದು ಗಿರ್-ಸೋಮನಾಥ್ ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಚೌಧರಿ ಅವರು ತಿಳಿಸಿದ್ದಾರೆ.
ಇನ್ನು ಕೆಲವರ ವಿರುದ್ಧ ಕೊಲೆಯತ್ನ ಪ್ರಕರಣ ಸಹ ದಾಖಲಿಸಲಾಗಿದೆ ಎಂದು ಉನಾ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಜಿ.ವಘೇಲಾ ಅವರು ಹೇಳಿದ್ದಾರೆ.