ಕಾಶ್ಮೀರ ಹಿಂಸಾಚಾರ: ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಮೊಹಬೂಬಾ ಮುಫ್ತಿ

ಪಾಕಿಸ್ತಾನ ಕಾಶ್ಮೀರ ಹಿಂಸಾಚಾರಕ್ಕೆ ನೇರವಾಗಿ ಬೆಂಬಲ ನೀಡುತ್ತಿದ್ದು, ನಮ್ಮ ವಿಚಾರದಲ್ಲಿ ಮಧ್ಯಪ್ರವೇಶಿಸಬೇಡಿ ಅದು ನಿಮಗೆ ಒಳ್ಳೆಯದಲ್ಲ ಎಂದು ಜಮ್ಮು...
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ಶ್ರೀನಗರ: ಪಾಕಿಸ್ತಾನ ಕಾಶ್ಮೀರ ಹಿಂಸಾಚಾರಕ್ಕೆ ನೇರವಾಗಿ ಬೆಂಬಲ ನೀಡುತ್ತಿದ್ದು, ನಮ್ಮ ವಿಚಾರದಲ್ಲಿ ಮಧ್ಯಪ್ರವೇಶಿಸಬೇಡಿ ಅದು ನಿಮಗೆ ಒಳ್ಳೆಯದಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೆಹಬೂಬಾ ಮುಫ್ತಿ ಅವರು ಪಾಕಿಸ್ತಾನ ವಿರುದ್ಧ ವಾಗ್ದಾಳಿ ನಡೆಸಿದರು. ಕಾಶ್ಮೀರ ವಿಚಾರವಾಗಿ ಪದೇ ಪದೇ ನಮ್ಮನ್ನು ಕೆಣಕಬೇಡಿ ಅದು ನಿಮಗೆ ಒಳ್ಳೆಯದಲ್ಲ ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದ ಜತೆ ಉತ್ತಮ ಭಾಂದವ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಯತ್ನಿಸುತ್ತಿದ್ದರು ಪಾಕಿಸ್ತಾನ ಭಯೋತ್ಪಾದನೆ ಮೂಲಕ ಉತ್ತರ ನೀಡುತ್ತಿದೆ. ಅಲ್ಲದೆ ಕಾಶ್ಮೀರ ಹಿಂಸಾಚಾರಕ್ಕೆ ಬಹಿರಂಗವಾಗಿಯೇ ಬೆಂಬಲ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಸ್ಲಾಮಾಬಾದ್ ನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ನಡೆಸಿಕೊಂಡಿದ್ದು ಸರಿಯಲ್ಲ. ಭಯೋತ್ಪಾದನೆ ವಿರುದ್ಧದ ಕಠಿಣ ಸಂದೇಶವನ್ನು ರವಾನಿಸಿದ್ದ ರಾಜನಾಥ್ ಸಿಂಗ್ ಅವರ ಭಾಷಣವನ್ನು ಪಾಕ್ ಮಾಧ್ಯಮಗಳಲ್ಲಿ ನೇರ ಪ್ರಸಾರ ಮಾಡದೇ ಬ್ಲಾಕ್ ಮಾಡಿ ಅಪಮಾನವೆಸಗಿದ್ದಿರಿ ಎಂದು ಆರೋಪಿಸಿದರು.

ಕಾಶ್ಮೀರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂಸಾಚಾರ ಶಮನಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದು ಅದಕ್ಕೆ ಬೇಕಾದ ಎಲ್ಲಾ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com