ನವದೆಹಲಿ: 500 ಹಾಗೂ 1.000 ರು ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿ ಇಂದಿಗೆ ಒಂದು ತಿಂಗಳು ಕಳೆದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಕಪ್ಪು ದಿನಾಚರಣೆ ನಡೆಸುತ್ತಿರುವುದಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ವಿರೋಧಿಗಳು, ಅದರಲ್ಲೂ ಕಾಂಗ್ರೆಸ್ ನವರು ಕಪ್ಪು ದಿನ ಆಚರಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಅವರು ಕಪ್ಪು ಹಣಕ್ಕೆ ಬೆಂಬಲ ನೀಡುವ ದಿನ ಆಚರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ದೊಡ್ಡ ತಮಾಷೆ ಎಂದು ಹೀಗಳೆದ ನಾಯ್ಡು, ಇದು ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
ನವೆಂಬರ್ 8 ರಂದು 500 ಹಾಗೂ 1.000 ರು ಮುಖಬೆಲೆಯ ನೋಟುಗಳನ್ನು ನಿಷೇಧಿಸಿ ಪ್ರಧಾನಿ ಆದೇಶ ಹೊರಡಿಸಿದ್ದರು. ಇಂದಿಗೆ ಒಂದು ತಿಂಗಳು ತುಂಬಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಈ ದಿನವನ್ನು ಕಪ್ಪು ದಿನವನ್ನಾಗಿ ಆಚರಿಸಿ, ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದವು. ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿರುವ ವೆಂಕಯ್ಯ ನಾಯ್ಡು, ಸಂಸತ್ ಅಧಿವೇಶನ ನಡೆಸಲು ಅಡ್ಡಿ ಪಡಿಸುತ್ತಿರುವ ವಿರೋಧ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತ ರೀತಿಯಲ್ಲಿ ವರ್ತಿಸುತ್ತಿವೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
Advertisement