ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಅರುಚಾಲ ಪ್ರದೇಶದ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಬುಧವಾರ ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ,ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಕಳೆದ ಜನವರಿ 26ರಂದು ಜಾರಿಗೊಳಿಸಿದ್ದ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯುವಂತೆ ಶಿಫಾರಸು ಮಾಡಿದೆ.
ನಿನ್ನೆಯಷ್ಟೇ ಅರುಣಾಚಲ ರಾಜ್ಯಪಾಲ ಜೆ.ಪಿ.ರಖೋವಾ ಅವರಿಗೆ ಹೊಸ ಸರ್ಕಾರ ರಚನೆಗೆ ನಿರ್ಬಂಧ ಹೇರಬೇಕು ಎಂದು ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, ಈ ವಿಚಾರದಲ್ಲಿ ಮಧ್ಯಂತರ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದಿತ್ತು.
ಸೋಮವಾರ ಕಾಂಗ್ರೆಸ್ ಬಂಡಾಯ ಶಾಸಕ ಕಲಿಖೋ ಪುಲ್ 31 ಶಾಸಕರ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿತ್ತು. ಈ ನಿಯೋಗದಲ್ಲಿ 19 ಬಂಡಾಯ ಕಾಂಗ್ರೆಸ್ ಶಾಸಕರು, 11 ಬಿಜೆಪಿ ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದರು.