ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಡುವಿನ ಜಟಾಪಟಿ ಮುಂದುವರೆದಿದ್ದು, ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತ ತನಿಖೆ ಕಾನೂನು ಬಾಹಿರ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ.
ಡಿಡಿಸಿಎ ಹಗರಣದ ಕುರಿತು ದೆಹಲಿ ಸರ್ಕಾರ ನಡೆಸುತ್ತಿರುವ ತನಿಖೆ ಕಾನೂನು ಬಾಹಿರ. ಏಕೆಂದರೆ ಡಿಡಿಸಿಎ ದೆಹಲಿ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.
ಕೇಜ್ರಿವಾಲ್ ಅವರು ಕಳೆದ ಡಿಸೆಂಬರ್ನಲ್ಲಿ ಡಿಡಿಸಿಎಂ ಹಗರಣದ ತನಿಖೆಗೆ ಸೊಲಿಸಿಟೊರ್ ಜನರಲ್ ಹಾಗೂ ಖ್ಯಾತ ವಕೀಲ ಗೋಪಾಲ್ ಸುಬ್ರಮಣ್ಯಯಂ ಅವರನ್ನು ನೇಮಕ ಮಾಡಿದ್ದರು.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಡಿಡಿಸಿಎ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಕ್ರಿಕೆಟ್ ಸಂಸ್ಥೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಎಎಪಿ ನಾಯಕರು ಆರೋಪಿಸಿದ್ದರು. ಈ ಸಂಬಂಧ ಜೇಟ್ಲಿ ಅವರು ಕೇಜ್ರಿವಾಲ್ ಹಾಗೂ ಆಪ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.