ಡೆಹ್ರಾಡೂನ್: ಉತ್ತರಾಖಂಡ್ ಸರ್ಕಾರದಲ್ಲಿ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿದ್ದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶೋರ್ ಉಪಾಧ್ಯಾಯ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಆಡಳಿತ ಹಿಂತೆಗೆತದ ನಂತರ ಅಧಿಕಾರ ವಹಿಸಿಕೊಂಡಾಗಿನಿಂದ ಸಿಎಂ ಹರೀಶ್ ರಾವತ್ ಧೋರಣೆಗಳಲ್ಲಿ ಬದಲಾವಣೆಗಳಾಗಿವೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಿಶೋರ್ ಉಪಾಧ್ಯಾಯ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಹರೀಶ್ ರಾವತ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಿಶೋರ್ ಉಪಾಧ್ಯಾಯ, ಕೇಂದ್ರ ಸರ್ಕಾರವಿರಬಹುದು, ರಾಜ್ಯ ಸರ್ಕಾರವಿರಬಹುದು ಅಧಿಕಾರಕ್ಕೆ ಬಂದ ನಂತರ, 5 ವರ್ಷಗಳಿಗಾಗಿ ಆಯ್ಕೆಗೊಂಡಿದ್ದೇವೆ ಎಂಬುದನ್ನೂ ಮರೆತು ಅಧಿಕಾರ ಪಡೆದವರು ಬದಲಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದ್ದರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಕಿಶೋರ್ ಉಪಾಧ್ಯಾಯ, ಮತ್ತೊಮ್ಮೆ ಇಂತಹ ಸಂದರ್ಭ ಎದುರಾಗದಂತೆ ಎಲ್ಲಾ ಕಾಂಗ್ರೆಸ್ಸಿಗರು ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದ್ದಾರೆ. ಕಿಶೋರ್ ಉಪಾಧ್ಯಾಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಹರೀಶ್ ರಾವತ್, ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಯನ್ನು ಗಂಭಿರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ.
Advertisement