ನವದೆಹಲಿ: ಮತಕ್ಕಾಗಿ ಹಣದ ವಿಚಾರವಾಗಿ ಸ್ಟಿಂಗ್ ಆಪರೇಷನ್ ಮೂಲಕ ತೀವ್ರ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್ ನಿಂದ ಮೂವರು, ಬಿಜೆಪಿ ಹಾಗೂ ಜೆಡಿಎಸ್ ನಿಂದ ತಲಾ ಒಬ್ಬ ಅಭ್ಯರ್ಥಿ ರಾಜ್ಯಸಭಾ ಚುನಾವಣೆ ಕಣದಲ್ಲಿದ್ದು ಚುನಾವಣೆ ತೀವ್ರ ಕುತೂಹಲ ಕೆರಳಿದೆ. ಕಾಂಗ್ರೆಸ್ ನಿಂದ ಆಸ್ಕರ್ ಫರ್ನಾಂಡೀಸ್, ಜೈರಾಮ್ ರಮೇಶ್, ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಜೆಡಿಎಸ್ ನಿಂದ ಬಿಎಂ ಫಾರೂಕ್ ಕಣಕ್ಕಿಳಿದಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪರ ಮತ ಹಾಕಲು ಶಾಸಕರು ಹಣದ ಬೇಡಿಕೆ ಇಟ್ಟಿದ್ದ ವಿಷಯ ಸ್ಟಿಂಗ್ ಆಪರೇಷನ್ ಮೂಲಕ ಬಹಿರಂಗವಾದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಸಭಾ ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ ಮಾತ್ರ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ. ಇದೇ ವೇಳೆ ಮತ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೂ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
Advertisement