ನವದೆಹಲಿ: ಕೇರಳದಲ್ಲಿ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ತಡೆಯುವುದರ ಬಗ್ಗೆ ಗಮನ ಹರಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮಿತಿಯೊಂದನ್ನು ರಚಿಸಿದ್ದಾರೆ.
ಕೇರಳದಲ್ಲಿ ದಲಿತ ವಿದ್ಯಾರ್ಥಿನಿ ಜಿಶಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ತ್ರಿಸದಸ್ಯ ಸಮಿತಿ ರಚಿಸುವುದರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಿದೆ. ಅತ್ಯಾಚಾರ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿರುವ ಅಮಿತ್ ಶಾ, ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ವಿಶೇಷವಾದ ಗಮನ ಹರಿಸಬೇಕೆಂದು ಸಮಿತಿಗೆ ಸೂಚನೆ ನೀಡಿದ್ದು, ಸಮಿತಿ ಮೇ.7 ,8 ,9 ರಂದು ಕೇರಳಕ್ಕೆ ಭೇಟಿ ನೀಡಲಿದೆ.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ, ಉದಿತ್ ರಾಜ್, ಅರ್ಜುನ್ ರಾಮ್ ಮೇಘವಾಲ್ ಸಮಿತಿಯ ಸದಸ್ಯರಾಗಿದ್ದಾರೆ. ನರ್ಸ್ ಮೇಲಿನ ಅತ್ಯಾಚಾರ ಪ್ರಕರಣವನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಿರುವ ಬಿಜೆಪಿ, ರಾಜ್ಯದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಬೇಕೆಂದು ಮನವಿ ಸಲ್ಲಿಸಿದೆ. ಮೇ.16 ರಂದು ಕೇರಳದಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ಹಿಂದೂಗಳ ಮತವನ್ನು ಕ್ರೋಡೀಕರಿಸಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ.
Advertisement