ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಬುಧವಾರ ಬೆಳಗ್ಗೆ ಓರ್ವ ಭಾರತೀಯ ಯೋಧನನ್ನು ಹತ್ಯೆಗೈದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಯೋಧರು ದಿಢೀರ್ ಕಾರ್ಯಾಚರಣೆ ನಡೆಸಿ, ಉಗ್ರರ ಮೇಲೆ ದಾಳಿ ಮಾಡಿದರು. ಈ ವೇಳೆ ಉಗ್ರಗಾಮಿಗಳು ಹಾಗೂ ಯೋಧರ ನಡುವೆ ತೀವ್ರ ಗುಂಡಿನ ಕಾಳಗೆ ನಡೆದಿದ್ದು, ಘಟನೆಯಲ್ಲಿ ಓರ್ವ ಯೋಧ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕುಪ್ವಾರ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಭಾರತೀಯ ಯೋಧರು ಮಂಗಳವಾರ ತಡರಾತ್ರಿಯಿಂದಲೇ ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದರು. ಅರಣ್ಯ ಪ್ರದೇಶದಲ್ಲಿ ಉಗ್ರ ಗಾಮಿಗಳ ಜಾಡನ್ನು ಹಿಡಿದ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾನೆ. ಕಾರ್ಯಚರಣೆ ಮುಂದುವರೆದಿದ್ದು, ಈಗಾಗಲೇ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಉಗ್ರರ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಯೋಧನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮತ್ತಿಬ್ಬರು ಗಾಯಾಳು ಯೋಧರನ್ನು ಏರ್ ಲಿಫ್ಟ್ ಕಾರ್ಯಾಚರಣೆ ಮೂಲಕವಾಗಿ ಬಾದಾಮಿ ಬಾಗ್ ಕಂಟೋನ್ಮೆಂಟ್ ನಲ್ಲಿರುವ ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement