ನವದೆಹಲಿ: ಬಹು ನಿರೀಕ್ಷಿತ ಐದು ರಾಜ್ಯಗಳ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದ್ದು, ಹಲವು ರಾಜಕೀಯ ಪಕ್ಷಗಳ ಹಾಗೂ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಅಲ್ಲದೆ ಯಾವ ರಾಜ್ಯದಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೂ ತೆರೆ ಬೀಳಲಿದೆ.
ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪಾಂಡಿಚೇರಿಯಲ್ಲಿ ಗುರುವಾರ ಬೆಳಗ್ಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನ 3 ಗಂಟೆ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್, ಅಸ್ಸಾಂನಲ್ಲಿ ಬಿಜೆಪಿ ಹಾಗೂ ಕೇರಳದಲ್ಲಿ ಎಡರಂಗ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಸಮೀಕ್ಷೆಗಳ ಭವಿಷ್ಯ ನಾಳೆ ಬಹಿರಂಗವಾಗಲಿದೆ.