ಜಮ್ಮು: ಜಮ್ಮು ಮತ್ತು ಕಾಶ್ಮೀರದ ನೌಶೇರ ಸೆಕ್ಟರನಲ್ಲಿ ಪಾಕಿಸ್ತಾನ ಮಂಗಳವಾರ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೈನಿಕರು ಭಾರತೀಯ ಸೇನಾ ಶಿಬಿರಗಳನ್ನು ಹಾಗೂ ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿರುವ ಭಾರತ, ಪಾಕಿಸ್ತಾನದ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದೆ.
ಉಭಯ ದೇಶಗಳ ಸೈನಿಕರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ ಎಂದು ಸೇನಾ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಈ ಮುಂಚೆ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್ ಪಡೆಗಳು, ಇಂದು ಮಧ್ಯಾಹ್ನ 1.45ರ ಸುಮಾರಿಗೆ ಕೃಷ್ಣಘಟಿ ಸೆಕ್ಟರ್ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದವು ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.
ನವೆಂಬರ್ 6ರಂದು ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು ಮತ್ತು ಐವರು ಗಾಯಗೊಂಡಿದ್ದರು.