ಕಾನ್ಪುರ ರೈಲು ದುರಂತ: ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ - ಸುರೇಶ್ ಪ್ರಭು ಭರವಸೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು...
ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು
ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು

ನವದೆಹಲಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಸೋಮವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಕಲಾಪದ ವೇಳೆ ಪ್ರಸ್ತಾಪವಾದ ರೈಲು ದುರಂತ ಪ್ರಕರಣ ಸಂಬಂಧ ಸುರೇಶ್ ಪ್ರಭು ಅವರು ಮಾತನಾಡಿದ್ದಾರೆ. ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದ್ದು, ರೈಲ್ವೆ ಸುರಕ್ಷತಾ ಆಯೋಗ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಎರಡು ರೀತಿಯಲ್ಲಿ ತನಿಖೆ ನಡೆಸಲಾಗುತ್ತಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ಕೂಡ ಪ್ರತೀಯೊಂದು ಆಯಾಮವನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
 
ದುರಂತದಲ್ಲಿ ಸಾವನ್ನಪ್ಪಿದ ಹಾಗೂ ಗಾಯಾಳುಗಳಿಗೆ ಸೂಕ್ತ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಘಟನೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶದ ಪುಖರಾಯಾ ಬಳಿ ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ ಭಾನುವಾರ ಬೆಳಿಗ್ಗೆ 14 ಬೋಗಿಗಳಿದ್ದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿತ್ತು. ದುರ್ಘಟನೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ವರೆಗೂ 142 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 169 ಮಂದಿ ಗಾಯಾಳುಗಳ ಪಟ್ಟಿಯನ್ನು ಅಲ್ಲಿನ ಸರ್ಕಾರ ಬಿಡುಗಡೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com